ರಾಜಕೀಯ
ಮೋದಿ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭ: ಸಿಎಂ ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು....
ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ಇಂದು ಹೊಸದುರ್ಗದಲ್ಲಿ ರಾಜ್ಯ ಸರ್ಕಾರದ ಸಾಧನ ಸಮಾವೇಶ ಉದ್ದೇಶಿಸಿ ಮಾತನಾಡಿದ ಸಿಎಂ, ಉತ್ತರ ಪ್ರದೇಶ ಮತ್ತು ಬಿಹಾರ ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಗೋರಖ್ ಪುರ ಮತ್ತು ಪಲ್ಪುರ್ ಸೇರಿದಂತೆ ಐದು ಸ್ಥಾನಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಇದು ಜನ ಸುಳ್ಳು ಹೇಳುವ ಮೋದಿ ಜತೆ ಇಲ್ಲ ಎಂಬುದರ ಸ್ಪಷ್ಟ ಸೂಚನೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ತವರು ಕ್ಷೇತ್ರದಲ್ಲೇ ಬಿಜೆಪಿ ಸೋತಿದ್ದು, ಇದರೊಂದಿಗೆ ಮೋದಿ ಸರ್ಕಾರದ ಅಂತ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂದು ಸಿಎಂ ಹೇಳಿದ್ದಾರೆ.
ಇದಕ್ಕು ಮುನ್ನ ಚಿತ್ರದುರ್ಗದಲ್ಲಿ ವರದಿಗಾರರೊಂದಿಗೆ ಮಾತನಾಡಿದ್ದ ಸಿಎಂ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತವರಿನಲ್ಲೇ ಬಿಜೆಪಿ ಸೋತಿದೆ. ಇನ್ನು ಅವರು ಕರ್ನಾಟದಲ್ಲಿ ಬಿಜೆಪಿಯನ್ನು ಗೆಲ್ಲಿಸುತ್ತಾರಾ? 'ಅಲ್ಲಿ ಸಲ್ಲದವರು ಇಲ್ಲಿ ಸಲ್ಲರಯ್ಯ, ಇಲ್ಲಿ ಸಲ್ಲುವರು ಅಲ್ಲೂ ಸಲ್ಲುವರಯ್ಯ...' ಎಂದು ವ್ಯಂಗ್ಯವಾಡಿದ್ದರು.