ಮುಂದಿನ ಶೈಕ್ಷಣಿಕ ವರ್ಷದಿಂದ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ: ಸಿಎಂ ಸಿದ್ದರಾಮಯ್ಯ
ಮೈಸೂರು: ಸರ್ಕಾರಿ ಶಾಲಾ,ಕಾಲೇಜುಗಳಲ್ಲಿ ಪ್ರಾಥಮಿಕ ಹಂತದಿಂದ ಸ್ನಾತಕೋತ್ತರ ಪದವಿಯವರೆಗೆ ಅಧ್ಯಯನ ನಡೆಸುವ ಎಲ್ಲಾ ಹೆಣ್ಣು ಮಕ್ಕಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಉಚಿತ ಶಿಕ್ಷಣ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ.
ಅವರು ಇಂದು ಮೈಸೂರಿನಲ್ಲಿ ಕಾಂಗ್ರೆಸ್ ವತಿಯಿಂದ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆಯ ನಾಲ್ಕನೇ ಹಂತದಲ್ಲಿ ಮಾತನಾಡಿ, ಈ ಸಾಲಿನ ಬಜೆಟ್ ಮಂಡನೆ ವೇಳೆ ಘೋಷಣೆ ಮಾಡಿರುವಂತೆ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಅಧ್ಯಯನ ನಡೆಸುವ ಎಲ್ಲಾ ಜಾತಿ, ಧರ್ಮಗಳ ಹೆಣ್ಣು ಮಕ್ಕಳಿಗೆ ಈ ಸೌಲಭ್ಯ ಸಿಗಲಿದೆ, ಅಲ್ಲದೆ ಉಚಿತ ಲ್ಯಾಪ್ ಟಾಪ್ ಮತ್ತು ಬಸ್ ಪಾಸ್ ಕೂಡ ವಿತರಿಸಲಾಗುವುದು ಎಂದರು. ಎಂದರು.
ಈ ಯೋಜನೆ ಈಗಾಗಲೇ ದ್ವಿತೀಯ ಪಿಯುಸಿವರೆಗೆ ಜಾರಿಯಲ್ಲಿದ್ದು, ಈ ವರ್ಷದಿಂದ ಅದು ಪದವಿ ಮತ್ತು ಸ್ನಾತಕೋತ್ತರ ಪದವಿಯವರೆಗೆ ಸಹ ವಿಸ್ತರಣೆಯಾಗಲಿದೆ ಎಂದು ತಿಳಿಸಿದರು.
ಚಾಮರಾಜನಗರಕ್ಕೆ ಭೇಟಿ ನೀಡಿದರೆ ಮುಖ್ಯಮಂತ್ರಿ ಪದವಿ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆ ಭಯದಿಂದ ಈ ಜಿಲ್ಲೆಗೆ ಇದುವರೆಗೆ ಯಾವುದೇ ಮುಖ್ಯಮಂತ್ರಿ ಭೇಟಿ ನೀಡಲು ಹಿಂಜರಿಯುತ್ತಿದ್ದರು. ಆದರೆ ತಾವು ಅಧಿಕಾರಕ್ಕೆ ಬಂದ ನಂತರ ಏಳೆಂಟು ಸಲ ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದೇನೆ. ಅಲ್ಲಿಗೆ ಹೋಗಿರುವುದರಿಂದಲೇ ನಾನು 5 ವರ್ಷಗಳ ಕಾಲ ಭದ್ರವಾಗಿ ಆಡಳಿತ ನಡೆಸಿದ್ದೇನೆ ಎಂದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ