ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರಮೋದಿ, ತಮ್ಮ ವಿರುದ್ಧ ಮಾಡುತ್ತಿರುವ ಆರೋಪಗಳು ನಿರಾಧಾರವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರೆಸ್ಕ್ಲಬ್ನಲ್ಲಿಂದು ಬೆಂಗಳೂರು ವರದಿಗಾರರ ಕೂಟ ಮತ್ತು ಪ್ರೆಸ್ಕ್ಲಬ್ ಜಂಟಿಯಾಗಿ ಆಯೋಜಿಸಿದ್ದ ಮಾತುಮಂಥನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಸಂಸದೀಯ ಭಾಷೆಯನ್ನು ಬಳಸುತ್ತಿದ್ದು, ಕೀಳುಮಟ್ಟದ ಮಾತುಗಳನ್ನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಪ್ರಧಾನಿ, ರಾಷ್ಟ್ರಪತಿ, ಲೋಕಸಭೆ ಅಧ್ಯಕ್ಷ ಸ್ಥಾನಗಳ ಬಗ್ಗೆ ನಮಗೆ ಅಪಾರ ಗೌರವವಿದೆ. ಆದರೆ, ಅವರು ತಮ್ಮ ಹುದ್ದೆಯ ಘನತೆ ಮರೆತು ಮಾತನಾಡಿದಾಗ ನಾನು ಉತ್ತರ ಕೊಡಬೇಕಾಗುತ್ತದೆ. ಇಲ್ಲವಾದರೆ ಜನ ಅದನ್ನು ಸತ್ಯ ಎಂದು ನಂಬಿಕೊಳ್ಳುತ್ತಾರೆ ಎಂದು ಹೇಳಿದರು.
ಎರಡು ಕ್ಷೇತ್ರದಲ್ಲಿ ನಿಲ್ಲಬೇಕು ಎಂದು ಬಯಸಿರಲಿಲ್ಲ. ಆದರೆ, ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆ ಜನ ಒತ್ತಾಯ ಮಾಡಿದರು. ಹಾಗಾಗೀ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೇನೆ. ಎರಡೂ ಕ್ಷೇತ್ರದಲ್ಲೂ ಗೆಲ್ಲುತ್ತೇನೆ. ನನ್ನ ಪುತ್ರ ಡಾ.ಯತೀಂದ್ರ ವರುಣಾ ಕ್ಷೇತ್ರದಲ್ಲಿ ಗೆಲ್ಲುತ್ತಾರೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಯಾವುದೇ ಮ್ಯಾಜಿಕ್ ನಡೆಯುವುದಿಲ್ಲ, ರಾಜ್ಯದ ಎಲ್ಲಾ ಕಡೆ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ಕಂಡುಬಂದಿದ್ದು, ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಸಿದ್ದರಾಮಯ್ಯ ಹೇಳಿದರು.
Advertisement