ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಸಂಬಂಧ ನಾಯಕರು ಚರ್ಚೆ ನಡೆಸುತ್ತಿದ್ದು, ಕುಮಾರಸ್ವಾಮಿಗೆ ಮುಖ್ಯಮಂತ್ರಿ ಸ್ಥಾನ ನೀಡಲು ಸೋನಿಯಾಗಾಂಧಿ ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಈ ಸಂಬಂಧ ಎಐಸಿಸಿ ಅಧಿನಾಯಕಿ ಸೋನಿಯಾಗಾಂಧಿ ಹಾಗೂ ಗುಲಾಂ ನಬೀ ಅಜಾದ್ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಅವರೊಂದಿಗೆ ಮಾತುಕತೆ ನಡೆಸಿದ್ದು, ಕುಮಾರಸ್ವಾಮಿಗೆ ಕಾಂಗ್ರೆಸ್ ಪಕ್ಷ ನೀಡಿರುವ ಮುಖ್ಯಮಂತ್ರಿ ಸ್ಥಾನದ ಆಪರ್ ನ್ನು ಜೆಡಿಎಸ್ ಒಪ್ಪಿಕೊಂಡಿದೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ.
ಜೆಡಿಎಸ್ ನೊಂದಿಗೆ ಮೈತ್ರಿ ಸರ್ಕಾರ ರಚನೆಗೆ ಕಾಂಗ್ರೆಸ್ ಚರ್ಚೆ ನಡೆಸುವುದಾಗಿ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬೆಳಿಗ್ಗೆಯಷ್ಟೇ ಹೇಳಿಕೆ ನೀಡಿದ್ದರು. ಜೆಡಿಎಸ್ ಬಿಜೆಪಿಗಿಂತಲೂ ಕಾಂಗ್ರೆಸ್ ಜೊತೆಗೆ ಸೇರುವ ಸಾಧ್ಯತೆ ಇದ್ದು, ಈ ಬಗ್ಗೆ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡರ ನಿರ್ಧಾರವೇ ಅಂತಿಮವಾಗಲಿದೆ.
ಬಿಜೆಪಿ 104 ಸ್ಥಾನಗಳಲ್ಲಿ , ಕಾಂಗ್ರೆಸ್ 73, ಜೆಡಿಎಸ್ 41 ಹಾಗೂ ಇತರರು 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.
Advertisement