ಆರ್ ಆರ್ ನಗರ-ಜಯನಗರ ಚುನಾವಣೆ: ಮೈತ್ರಿ ಬಗ್ಗೆ ಗೊಂದಲದಲ್ಲಿ ಕಾಂಗ್ರೆಸ್-ಜೆಡಿಎಸ್

ನಗರದ ರಾಜರಾಜೇಶ್ವರಿ ನಗರ ಮತ್ತು ಜಯನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಮೈತ್ರಿ ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದ ರಾಜರಾಜೇಶ್ವರಿ ನಗರ ಮತ್ತು ಜಯನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಮೈತ್ರಿ ಮಾಡಿಕೊಂಡು ಸೋಲಿಸಲು ಜೆಡಿಎಸ್ ಮತ್ತು ಕಾಂಗ್ರೆಸ್ ಪ್ರಯತ್ನಿಸುತ್ತಿದ್ದರೆ, ಇನ್ನೂ ಒಟ್ಟಾಗಿ ಚುನಾವಣೆಯನ್ನು ಎದುರಿಸುವ ಬಗ್ಗೆ ತೀರ್ಮಾನ ಮಾಡಿಕೊಂಡಿಲ್ಲ.

ಈ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಈ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ನಿರಾಕರಿಸಿದರು. ನಮ್ಮ ಅಭ್ಯರ್ಥಿಗಳು ಈಗಾಗಲೇ ಕಣದಲ್ಲಿರುವುದರಿಂದ ಮೈತ್ರಿಯ ಸಾಧ್ಯತೆಯಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿ ಬಿ.ಎನ್.ವಿಜಯ್ ಕುಮಾರ್ ಅವರ ಹಠಾತ್ ನಿಧನದಿಂದ ರದ್ದಾಗಿದ್ದ ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆ ಜೂನ್ 11ರಂದು ಮತ್ತು ರಾಜರಾಜೇಶ್ವರಿ ನಗರದಲ್ಲಿ ಇದೇ ತಿಂಗಳ 28ರಂದು ಮತದಾನ ನಡೆಯಲಿದೆ. ಜಯನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಗೆಲುವಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಈಗಾಗಲೇ ಒಳ ಒಪ್ಪಂದ ಮಾಡಿಕೊಂಡಿವೆ ಎನ್ನಲಾಗುತ್ತಿದೆ. ಇನ್ನು ಬಿಜೆಪಿ ಜನರಿಂದ ಅನುಕಂಪದ ಮತ ಗಿಟ್ಟಿಸಿಕೊಳ್ಳಲು ವಿಜಯ್ ಕುಮಾರ್ ಅವರ ಸೋದರ ಪ್ರಹ್ಲಾದ್ ಬಾಬು ಅವರನ್ನು ಕಣಕ್ಕಿಳಿಸಲು ಯೋಜನೆ ಮಾಡುತ್ತಿದೆ. ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿತ್ತು.

ಈ ಬಗ್ಗೆ ನಿನ್ನೆ ಪ್ರತಿಕ್ರಿಯೆ ನೀಡಿದ ಹೆಚ್ ಡಿ ಕುಮಾರಸ್ವಾಮಿ, ಕಾಂಗ್ರೆಸ್ ಜೊತ ಮೈತ್ರಿ ಮಾಡಿಕೊಳ್ಳುವ ಕುರಿತು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದಿದ್ದಾರೆ. ಎರಡು ಕ್ಷೇತ್ರಗಳಲ್ಲಿ ಗೆದ್ದಿರುವ ಹೆಚ್ ಡಿ ಕುಮಾರಸ್ವಾಮಿಯವರು ರಾಮನಗರ ಕ್ಷೇತ್ರ ಬಿಟ್ಟು ಚನ್ನಪಟ್ಟಣ ಕ್ಷೇತ್ರ ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ.ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧೆಗೆ ನಿಲ್ಲಲಿದ್ದು ಇಲ್ಲಿ ಕಾಂಗ್ರೆಸ್ ಜೆಡಿಎಸ್ ಗೆ ಬೆಂಬಲ ನೀಡಲು ಮುಂದಾಗಿದೆ.

ಇನ್ನು ಬಿಜೆಪಿ ರಾಮನಗರದಲ್ಲಿ ಸಿ.ಪಿ.ಯೋಗೇಶ್ವರ್ ಅವರನ್ನು ನಿಲ್ಲಿಸಿ ಪ್ರಬಲ ಪೈಪೋಟಿ ನೀಡಲು ಮುಂದಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಕೂಡ ಮೈತ್ರಿ?:
2019ರ ಲೋಕಸಭೆ ಚುನಾವಣೆಯಲ್ಲಿ ಕೂಡ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಳು ಒಟ್ಟಾಗಿ ಚುನಾವಣೆ ಎದುರಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸುಳಿವು ನೀಡಿದ್ದಾರೆ. ಎರಡು ಜಾತ್ಯತೀತ ಪಕ್ಷಗಳು ಒಂದಾದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com