ಬೆಂಗಳೂರು: ಅಕ್ರಮವಾಗಿ ಮತದಾರರ ಗುರುತಿನ ಚೀಟಿ ಸಂಗ್ರಹಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ರಾಜರಾಜೇಶ್ವರಿನಗರ ವಿಧಾನಸಭೆಗೆ ಸೋಮವಾರ ಚುನಾವಣೆ ನಡೆದಿದ್ದು, ಶೇ. 54ರಷ್ಟು ಮತದಾನವಾಗಿದೆ.
ಕೆಲವು ಮತಗಟ್ಟೆಗಳಲ್ಲಿ ಇವಿಎಂ ದೋಷ ಹೊರತುಪಡಿಸಿ ಉಳಿದಂತೆ ಬಹುತೇಕ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದೆ.
ರಾಜರಾಜೇಶ್ವರಿನಗರದಲ್ಲಿ ಕಳೆದ ಬಾರಿ ಶೇ. 56ರಷ್ಟು ಮತದಾನವಾಗಿತ್ತು. ಈ ಬಾರಿ ಶೇ.2ರಷ್ಟು ಕಡಿಮೆ ಮತದಾನವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ.
ಮೇ 31ರಂದು ರಾಜರಾಜೇಶ್ವರಿ ಕ್ಷೇತ್ರದ ಫಲಿತಾಂಶ ಪ್ರಕಟಗೊಳ್ಳಲಿದ್ದು, ಕ್ಷೇತ್ರದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದೆ.
ಜಾಲಹಳ್ಳಿಯ ಅಪಾರ್ಟ್ಮೆಂಟ್ವೊಂದರಲ್ಲಿ 9 ಸಾವಿರಕ್ಕೂ ಅಧಿಕ ಅಸಲಿ ಮತದಾರರ ಗುರುತಿನ ಚೀಟಿಗಳು ದೊರೆತ ಹಿನ್ನೆಲೆಯಲ್ಲಿ ಮೇ 12ರಂದು ನಡೆಯಬೇಕಿದ್ದ ಚುನಾವಣೆಯನ್ನು ಚುನಾವಣಾ ಆಯೋಗ 28ಕ್ಕೆ ಮುಂದೂಡಿತ್ತು.