ಹೆಚ್ ಡಿ ರೇವಣ್ಣ, ಸಿದ್ದರಾಮಯ್ಯ
ಹೆಚ್ ಡಿ ರೇವಣ್ಣ, ಸಿದ್ದರಾಮಯ್ಯ

ಹಾಸನದಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರ ಭಿನ್ನಮತ: ಸಿದ್ದರಾಮಯ್ಯಗೆ ದೂರು

ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರ ನಡುವಿನ ಭಿನ್ನಮತ...
Published on

ಹಾಸನ: ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರ ನಡುವಿನ ಸಂಘರ್ಷ ಸ್ಫೋಟಗೊಂಡಿದೆ. ಜಿಲ್ಲೆಯ ಕಾಂಗ್ರೆಸ್ ನಾಯಕರ ಗುಂಪೊಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದೂರು ನೀಡಿ ಜೆಡಿಎಸ್ ಕಾರ್ಯಕರ್ತರು ತಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದು ಇದರ ಹಿಂದೆ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಅವರ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಾವಗಲ್ ಮಂಜುನಾಥ್ ನೇತೃತ್ವದಲ್ಲಿ ಹಾಸನ ಜಿಲ್ಲಾ ಕಾಂಗ್ರೆಸ್ ನಾಯಕರು ನಿನ್ನೆ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯನವರನ್ನು ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಡಿ ರೇವಣ್ಣನವರು ಚುನಾವಣಾ ಜನ ಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮ್ಮಿಶ್ರ ಸರ್ಕಾರ ಅನುಮೋದನೆ ನೀಡಿರುವ ವಿವಿಧ ಅಭಿವೃದ್ಧಿಪರ ಕೆಲಸಗಳನ್ನು ತ್ವರಿತವಾಗಿ ಜಾರಿಗೆ ತರುವಲ್ಲಿ ವಿಫಲರಾಗಿದ್ದಾರೆ ಎಂದು ದೂರಿದ್ದಾರೆ.

ಕಾಂಗ್ರೆಸ್ ನಾಯಕರು ಮತ್ತು ಸ್ಥಳೀಯ ಕಾರ್ಯಕರ್ತರನ್ನು ರೇವಣ್ಣನವರು ನಿರ್ಲಕ್ಷಿಸುತ್ತಿದ್ದು ಪ್ರಮುಖ ನಿರ್ಧಾರ ತೆಗೆದುಕೊಳ್ಳುವಾಗ ಚರ್ಚಿಸುವುದಿಲ್ಲ. ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಜೆಡಿಎಸ್ ಕಾರ್ಯಕರ್ತರು ದರ್ಪ ತೋರಿಸುತ್ತಿದ್ದರೂ ಇದನ್ನೆಲ್ಲಾ ನೋಡಿಕೊಂಡು ರೇವಣ್ಣನವರು ಸುಮ್ಮನೆ ಕುಳಿತಿದ್ದಾರೆ ಎಂದು ಸಿದ್ದರಾಮಯ್ಯನವರಿಗೆ ದೂರು ನೀಡಿದ್ದಾರೆ.

 ನಂತರ  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಾವಗಲ್ ಮಂಜುನಾಥ್ ಈ ಎಲ್ಲ ಭಿನ್ನಾಭಿಪ್ರಾಯವನ್ನು ಶಮನ ಮಾಡಲು ಯತ್ನಿಸಿದ್ದಾರೆ. ಹೆಚ್ ಡಿ ರೇವಣ್ಣ ವಿರುದ್ಧ ದೂರು ನೀಡಲು ನಾವು ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಲಿಲ್ಲ. ಹಾಸನ ಜಿಲ್ಲೆಯಲ್ಲಿ ಜೆಡಿಎಸ್ ನ ಕುಂದುಕೊರತೆಗಳನ್ನು ಹೇಳಲು ಭೇಟಿಯಾದೆವು ಎನ್ನುತ್ತಾರೆ.ಸರ್ಕಾರ ರಚನೆ ಮಾಡುವಾಗ ಮೈತ್ರಿ ಸರ್ಕಾರದಲ್ಲಿ ಒಪ್ಪಿಕೊಂಡ ತತ್ವಗಳನ್ನು ಪಾಲಿಸುವಲ್ಲಿ ಜೆಡಿಎಸ್ ವಿಫಲವಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಶ್ವೇತಾ ದೇವರಾಜ್, ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ, ಮಾಜಿ ಸಚಿವ ಬಿ ಶಿವರಾಮ್, ಮಾಜಿ ಶಾಸಕರಾದ ಸಿಎಸ್ ಪುಟ್ಟೇಗೌಡ ಮತ್ತು ಹೆಚ್ ಎಂ ವಿಶ್ವನಾಥ್, ಮಾಜಿ ರಾಜ್ಯ ಸಭಾ ಸದಸ್ಯ ಹೆಚ್ ಕೆ ಜವರೇಗೌಡ ನಿನ್ನೆ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ.

ಇನ್ನೊಂದೆಡೆ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರು ನಾಯಕರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹಾಸನದಿಂದ ಯಾವ ನಾಯಕರೂ ನನ್ನ ಬಳಿ ದೂರು ಹೇಳಲು ಬಂದಿಲ್ಲ. ಅಲ್ಲಿನ ರಾಜಕೀಯ ಸ್ಥಿತಿಗತಿ ಮತ್ತು ಸಂಘಟಿತ ವಿಷಯಗಳ ಕುರಿತು ಚರ್ಚಿಸಲು ಬಂದಿದ್ದರು. ಇದು ಕಾಂಗ್ರೆಸ್ ನ ಆಂತರಿಕ ವಿಷಯ. ಮಾತುಕತೆ ಮೂಲಕ ಅದನ್ನು ಬಗೆಹರಿಸಿಕೊಳ್ಳುತ್ತೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com