ಜಮಖಂಡಿ ಉಪಚುನಾವಣೆ: ಗರಿಗೆದರಿದ ರಾಜಕೀಯ ಚಟುವಟಿಕೆ
ಜಮಖಂಡಿ: ಸಿದ್ದು ನ್ಯಾಮೇಗೌಡ ಅವರ ನಿಧನದಿಂದಾಗಿ ತೆರವಾಗಿರುವ ಜಮಖಂಡಿ ವಿಧಾನಸಭಾ ಉಪಚುನಾವಣೆಗೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕಾಂಗ್ರೆಸ್ - ಜೆಡಿಎಸ್ ದೋಸ್ತಿ ಸರ್ಕಾರಕ್ಕೆ ಇದು ಮೊದಲ ವಿಧಾನಸಭೆ ಚುನಾವಣೆಯಾಗಿದೆ.
ಮಾಜಿ ಸಚಿವ ಸಿದ್ದು ನ್ಯಾಮೇಗೌಡ ಮೇ 28 ರಂದು ಗೋವಾದಿಂದ ವಾಪಾಸ್ ಬರುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟು, ಇಬ್ಬರು ಮಕ್ಕಳು ಹಾಗೂ ಮೂವರು ಪುತ್ರಿಯರನ್ನು ಆಗಲಿದ್ದರು.
ಸಿದ್ದು ನ್ಯಾಮೇಗೌಡ ಅವರ ಹಿರಿಯ ಪುತ್ರ ಆನಂದ್ ನ್ಯಾಮೇಗೌಡ (35) ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಈ ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯ ಹೊಂದಿಲ್ಲ. ಆದಾಗ್ಯೂ, ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಿಸಿದೆ. ಆದರೆ. ಪ್ರತಿಪಕ್ಷ ಬಿಜೆಪಿಯಿಂದ ಅಭ್ಯರ್ಥಿ ಆಯ್ಕೆ ಇನ್ನೂ ಅಂತಿಮಗೊಂಡಿಲ್ಲ.
ಮೂಲಗಳ ಪ್ರಕಾರ ಇನ್ನೊಂದು ವಾರದೊಳಗೆ ಉಪಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸುವ ಸಾಧ್ಯತೆ ಇದೆ. ನವೆಂಬರ್ ಕೊನೆಯ ವಾರದಲ್ಲಿ ಮತದಾನ ನಡೆಯುವ ನಿರೀಕ್ಷೆಯಿದೆ. ಚುನಾವಣೆಗೆ ಸಿದ್ದಗೊಳುವಂತೆ ಜಿಲ್ಲಾಡಳಿತಕ್ಕೆ ಚುನಾವಣಾ ಆಯೋಗ ನಿರ್ದೇಶಿಸಿದ್ದು, ರಾಮನಗರ ಕ್ಷೇತ್ರದ ಉಪಚುನಾವಣೆ ಜೊತೆಯಲ್ಲಿಯೇ ಈ ಕ್ಷೇತ್ರದ ಉಪಚುನಾವಣೆ ನಡೆಯುವ ಸಾಧ್ಯತೆ ಇದೆ.
ಮುರುಗೇಶ್ ನಿರಾಣಿ ಸಹೋದರ ಸಂಗಮೇಶ್ ನಿರಾಣಿ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಹೈಕಮಾಂಡ್ ಟಿಕೆಟ್ ನಿರಾಕರಿಸಿದ್ದರೆ, ಕುಲಕರ್ಣೀಗೆ ಸಿಗುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದು ಸವದಿ, ಸ್ಥಳೀಯ ಮಟ್ಟದಲ್ಲಿ ಚರ್ಚೆ ನಡೆಸಿ ಅಭ್ಯರ್ಥಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಮತ್ತೊಂದೆಡೆ ಪ್ರತಿಕ್ರಿಯಿಸಿದ ಆನಂದ್ ನ್ಯಾಮೇಗೌಡ, ಇತ್ತೀಚಿಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಪಕ್ಷದ ಪರ ಬೆಂಬಲ ವ್ಯಕ್ತವಾಗಿದ್ದು, ಜನರಿಗೆ ಒಳಿತು ಮಾಡುವ ನಿಟ್ಟಿನಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿರುವುದಾಗಿ ತಿಳಿಸಿದರು.