ಬೆಂಗಳೂರು: ನವೆಂಬರ್ 3 ರಂದು ನಡೆಯಲಿರುವ ಶಿವಮೊಗ್ಗ, ಮಂಡ್ಯ, ಬಳ್ಳಾರಿ ಲೋಕಸಭಾ ಹಾಗೂ ರಾಮನಗರ, ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್, ಜೆಡಿಎಸ್ ನಾಯಕರು ಇಂದು ಖಾಸಗಿ ಹೋಟೆಲ್ ವೊಂದರಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.
ಸುಮಾರು 12 ವರ್ಷಗಳ ನಂತರ ದೇವೇಗೌಡರು, ಹಾಗೂ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಕಂಡುಬಂದರು.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ. ದೇವೇಗೌಡರು ಮಾತನಾಡಿ, ಪಕ್ಷದ ಹಿತದೃಷ್ಟಿಯಿಂದ ಜೆಡಿಎಸ್ ಹಾಗೂ ಕಾಂಗ್ರೆಸ್ ಒಂದಾಗಬೇಕಿದೆ. ಉಪಚುನಾವಣೆಯಲ್ಲಿ ಶತಾಯ ಗತಾಯ ಗೆಲ್ಲಬೇಕಾಗಿದೆ. ಈ ಹಿನ್ನೆಲೆಯಲ್ಲಿ ಒಂದುಗೂಡಿ ಹೋರಾಟ ನಡೆಸಬೇಕಾಗಿದೆ ಎಂದರು.
12 ವರ್ಷಗಳ ಬಳಿಕ ಸಿದ್ದರಾಮಯ್ಯ , ತಾವೂ ಒಂದು ವೇದಿಕೆಯಲ್ಲಿದ್ದು, ಹಿಂದೆ ಎಷ್ಟೋ ದೂರ ಹೋಗಿದ್ದರೂ ಇಂದು ಒಂದಾಗಿದ್ದೇವೆ. ಉಪಚುನಾವಣೆಯನ್ನು ಒಟ್ಟಾಗಿ ಎದುರಿಸುತ್ತಿರುವುದಾಗಿ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮಾತನಾಡಿ, 2019ರ ಲೋಕಸಭಾ ಚುನಾವಣೆಯೇ ನಮ್ಮ ಗುರಿ. ಕೋಮುವಾದಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರ ಇಡುವ ಸಲುವಾಗಿ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, ಉಪ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಒಂದಾಗಿರುವುದಾಗಿ ಹೇಳಿದರು.
ಕಳೆದ ಚುನಾವಣೆಯಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತಗಳು ದೊರೆತಿವೆ. ಕೋಮುವಾದಿಗಳಿಗೆ ಅಧಿಕಾರ ಸಿಕ್ಕರೆ ನೆಮ್ಮದಿ ಇರಲ್ಲ, ಸಮಾಜದಲ್ಲಿ ಶಾಂತಿ, ನೆಮ್ಮದಿ ಮೂಡಲು ಸಾಧ್ಯವಿಲ್ಲ. ಜಾತ್ಯತೀತ ಪಕ್ಷಗಳೆಲ್ಲಾ ಬಿಜೆಪಿ ವಿರುದ್ಧ ಹೋರಾಡಬೇಕಾಗಿದೆ. ಅಗತ್ಯ ಬಿದ್ದರೆ ರಾಮನಗರಕ್ಕೂ ತಾನೂ ಕೂಡಾ ಹೋಗಿ ಮೈತ್ರಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸುವುದಾಗಿ ತಿಳಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವ ಡಿ. ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Advertisement