ಕಮಲ ಪಕ್ಷ ತೊರೆದ ಮೊಳಕಾಲ್ಮೂರು ಮಾಜಿ ಶಾಸಕ ತಿಪ್ಪೇಸ್ವಾಮಿ ಕಾಂಗ್ರೆಸ್ ಸೇರ್ಪಡೆ
ರಾಜಕೀಯ
ಕಮಲ ಪಕ್ಷ ತೊರೆದ ಮೊಳಕಾಲ್ಮೂರು ಮಾಜಿ ಶಾಸಕ ತಿಪ್ಪೇಸ್ವಾಮಿ ಕಾಂಗ್ರೆಸ್ ಸೇರ್ಪಡೆ
ಮೊಳಕಾಲ್ಮೂರು ಕ್ಷೇತ್ರದ ಮಾಜಿ ಶಾಸಕ ತಿಪ್ಪೇಸ್ವಾಮಿ ಶುಕ್ರವಾರ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರು: ಮೊಳಕಾಲ್ಮೂರು ಕ್ಷೇತ್ರದ ಮಾಜಿ ಶಾಸಕ ತಿಪ್ಪೇಸ್ವಾಮಿ ಶುಕ್ರವಾರ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. 2013ರಲ್ಲಿ ಶ್ರೀರಾಮುಲು ಅವರ ಬಿಎಸ್ ಆರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿದ್ದ ತಿಪ್ಪೇಸ್ವಾಮಿ 2018ರಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಕ್ಕದೆ ಮುನಿಸಿಕೊಂಡಿದ್ದ ತಿಪ್ಪೇಸ್ವಾಮಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.
ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಅವರು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ."ತಿಪ್ಪೇಸ್ವಾಮಿ ಅವರಿಗೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ತಳಮಟ್ಟದಿಂದ ಜನಸಂಪರ್ಕವಿದೆ. ತಮ್ಮ ಸಮಾಜಮುಖಿ ಕಾರ್ಯಗಳಿಂದ ಅವರು ಹೆಸರಾಗಿದ್ದಾರೆ. ಇದೇ ಕಾರಣಕ್ಕೆ ತಿಪ್ಪೇಸ್ವಾಮಿಯವರ ಆಗಮನ ಮುಂಬರುವ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಲಿದೆ" ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ದಿನೇಶ್ ಗುಂಡೂರಾವ್ ಪಕ್ಷದ ಧ್ವಜವನ್ನು ತಿಪ್ಪೇಸ್ವಾಮಿ ಅವರಿಗೆ ಹಸ್ತಾಂತರಿಸಿ ಅವರನ್ನು ಕೈ ಪಕ್ಷಕ್ಕೆ ಬರಮಾಡಿಕೊಂಡರು.
ಕಾಂಗ್ರೆಸ್ ಸೇರಿದ ತಿಪ್ಪೇಸ್ವಾಮಿ ಮಾತನಾಡಿ "ಕಳೆದ ಚುನಾವಣೆ ವ್ವೇಳೆ ಶ್ರೀರಾಮುಲು ಅವರು ಅವರ ಮನೆದೇವರಾಣೆಗೂ ಮೊಳಕಾಲ್ಮೂರಿನಲ್ಲಿ ತಿಪ್ಪೇಸ್ವಾಮಿಗೇ ಬಿಜೆಪಿ ಟಿಕೆಟ್ ಎಂದಿದ್ದರು. ಆದರೆ ನಾಮಪತ್ರ ಸಲ್ಲಿಕೆ ಹಿಂದಿನ ದಿನ ತಾವೇ ಅಭ್ಯರ್ಥಿ ಎಂದು ಘೋಷಿಸಿದ್ದರು. ಇನ್ನು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕಪ್ಪು ಹಣವನ್ನು ವಾಪಾಸು ತರುವುದಾಗಿ ಹೇಳಿತ್ತು. ಪ್ರತಿ ನಾಗರಿಕರ ಖಾತೆಗೆ 15 ಲಕ್ಷ ರು. ಹಾಕುವುದಾಗಿ ಸಹ ಹೇಳಿದ್ದರು. ಆದರೆ ಅದಾವುದೂ ನಿಜವಾಗಿಲ್ಲ. ನಾನು ಐದು ವರ್ಷಗಳ ಕಾಲ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ್ದೆ. ಆದರೆ ಕಡೆಗೆ ನನಗೇ ಕೈಕೊಟ್ತರು. ಬಿಜೆಪಿಯನ್ನು ನಂಬಬಾರದು" ಎಂದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ