ರಾಜಕೀಯ
ಗೊಂದಲ, ಕಚ್ಚಾಟಕ್ಕಿಂತ ಸರ್ಕಾರ ವಿಸರ್ಜಿಸಿ ಚುನಾವಣೆಗೆ ಹೋಗುವುದೇ ಪರಿಹಾರ: ಹೊರಟ್ಟಿ
ಮೇ 23 ರ ನಂತರ ಸರ್ಕಾರ ಬೀಳುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ, ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ, ...
ಹುಬ್ಬಳ್ಳಿ: ಮೇ 23 ರ ನಂತರ ಸರ್ಕಾರ ಬೀಳುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ, ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ, ಇಂತಹ ಗೊಂದಲದಲ್ಲಿ ಸರ್ಕಾರ ನಡೆಸಲು ಸಾಧ್ಯವಿಲ್ಲ. ಕಚ್ಚಾಡಿಕೊಂಡು ಸರ್ಕಾರ ನಡೆಸುವುದಕ್ಕಿಂತ ವಿಸರ್ಜನೆ ಮಾಡಿ ಮತ್ತೊಮ್ಮೆ ಚುನಾವಣೆಗೆ ಹೋಗಬೇಕೆಂಬುದು ಜನರ ಅಭಿಪ್ರಾಯವಾಗಿದೆ ಎಂಬುದಾಗಿ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಸಿರುಗಟ್ಟುವ ವಾತಾವರಣದಲ್ಲಿ ಸರ್ಕಾರ ನಡೆಸೋದು ಕಷ್ಟವಾಗುತ್ತದೆ. ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯ ಸಿಎಂ ಆಗಲಿ ಅಂತ ಪದೇ, ಪದೇ ಹೇಳಿಕೆ ಕೊಡುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ವಿಧಾನಸಭೆ ಚುನಾವಣೆ ನಡೆದು ಬಹುಮತದ ಸರ್ಕಾರ ಬರಲಿ ಎಂಬುದು ಜನರ ಅಭಿಪ್ರಾಯವಾಗಿದೆ ಎಂದು ತಿಳಿಸಿದ್ದಾರೆ.
ಭಿನ್ನಾಭಿಪ್ರಾಯವಿದ್ದರೇ ಬಹಿರಂಗವಾಗಿ ಯಾಕೆ ಹೇಳಿಕೆ ನೀಡಬೇಕು, ಸಮನ್ವಯ ಸಮಿತಿಯಲ್ಲಿ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಮೈತ್ರಿಯಲ್ಲಿನ ಗೊಂದಲ ಪರಿಹರಿಸಲು ಸಾಧ್ಯವಾಗದಿದ್ದ ಮೇಲೆ, ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸುವುದು ಉತ್ತಮ ಎಂದು ಬಸವರಾಜ ಹೊರಟ್ಟಿ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.