ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರೋಹಷನ್ ಬೇಗ್, ತಮ್ಮದೇ ಪಕ್ಷದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಪ್ರಮುಖವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನೇರವಾಗ್ದಾಳಿ ನಡೆಸಿದ್ದ ರೋಷನ್ ಬೇಗ್ ಅವರು, 'ಲೋಕಸಭಾ ಚುನಾವಣೆಯ ಟಿಕೆಟ್ ಕೊಡುವಾಗಲೇ ನಾನು ಅಸಮಾಧಾನ ವ್ಯಕ್ತಪಡಿಸಿದ್ದೆ. ಕ್ರಿಶ್ಚಿಯನ್ ಸಮುದಾಯಕ್ಕೆ ಒಂದೂ ಸೀಟ್ ಕೊಟ್ಟಿರಲಿಲ್ಲ. ಈ ಹಿಂದೆ ಅಲ್ಪಸಂಖ್ಯಾತರಿಗೆ ಮೂರು ಟಿಕೆಟ್ ಕೊಡುತ್ತಿದ್ದರು. ಆದರೆ ಈ ಬಾರಿಯ ಚುನಾವಣೆಯಲ್ಲಿ ಈ ಎರಡೂ ಸಮುದಾಯದವರನ್ನು ಕಡೆಗಣಿಸಲಾಗಿದೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ದುರಹಂಕಾರದಿಂದ ಈ ರೀತಿ ಫಲಿತಾಂಶ ಬರುತ್ತಿದೆ. ಎಚ್.ಡಿ. ಕುಮಾರಸ್ವಾಮಿಯವರ ಮನೆ ಬಾಗಿಲಿಗೆ ಹೋಗಿ ಅವರನ್ನು ಮುಖ್ಯಮಂತ್ರಿ ಮಾಡಿದರು. ಆನಂತರ ನಾನೇ ಮುಖ್ಯಮಂತ್ರಿ ಎಂದು ಹೇಳುತ್ತಾ ಓಡಾಡುತ್ತಿದ್ದಾರೆ. ಇದನ್ನೆಲ್ಲ ಜನರು ಗಮನಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು.