ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಕರ್ನಾಟಕದ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಿಸಿದ್ದು, ಮೇ 19ರಂದು ಮತದಾನ ನಡೆಯಲಿದೆ. ಮೇ 23ರಂದು ಲೋಕಸಭೆ ಚುನಾವಣೆಯ ಫಲಿತಾಂಶದೊಂದಿಗೆ ಕುಂದಗೋಳ ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.
ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಅವರ ಅಕಾಲಿಕ ಸಾವಿನಿಂದ ತೆರವಾಗಿದ್ದ ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರಕ್ಕೆ ಚುನಾವಣಾ ಆಯೋಗ ಇಂದು ಉಪ ಚುನಾವಣೆಯ ದಿನಾಂಕ ಪ್ರಕಟಿಸಿದ್ದು, ರಾಜಕೀಯ ಪಕ್ಷಗಳ ನಾಯಕರು ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಉಪ ಚುನಾವಣೆಯ ಸವಾಲು ಎದುರಿಸಬೇಕಾಗಿದೆ.
57 ವರ್ಷದ ಶಿವಳ್ಳಿ ಅವರು ಮಾರ್ಚ್ 22ರಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದರು. ಅವರು ನಿಧನರಾದ ಕೆಲವೇ ದಿನಗಳಲ್ಲಿ ಕುಂದಗೋಳ, ಗೋವಾದ ಪಣಜಿ, ತಮಿಳುನಾಡಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೂ ಉಪ ಚುನಾವಣೆ ಘೋಷಿಸಲಾಗಿದೆ.