ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಮಿಷನ್ ದಂಧೆ ಜನಕ: ಬಿಎಸ್ ವೈ ಪುತ್ರ ವಿಜಯೇಂದ್ರ

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಮಿಷನ್ ದಂಧೆಯ ಜನಕ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ಯುವನಾಯಕ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಕುಮಾರಸ್ವಾಮಿ ಮತ್ತು ವಿಜಯೇಂದ್ರ
ಕುಮಾರಸ್ವಾಮಿ ಮತ್ತು ವಿಜಯೇಂದ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಮಿಷನ್ ದಂಧೆಯ ಜನಕ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ಯುವನಾಯಕ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ವಹಿಸಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಪ್ರಕರಣವನ್ನು ಸಿಬಿಐಗಾದರೂ ವಹಿಸಲಿ ಡೊನಾಲ್ಡ್ ಟ್ರಂಪ್ ಗಾದರೂ ವಹಿಸಲಿ ಎಂದು ಸಿಡುಕಾಗಿ ನಿನ್ನೆ ಹೇಳಿಕೆ ನೀಡಿ,ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ್ದರು.

ಕುಮಾರಸ್ವಾಮಿ ಹೇಳಿಕೆ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ವಿಜಯೇಂದ್ರ ಅವರು, ಕಮಿಷನ್ ದಂಧೆ, ವರ್ಗಾವಣೆ ದಂಧೆ, ನೇಮಕಾತಿ ದಂಧೆಗಳ ಜನಕರು ಹಾಗೂ ಗುತ್ತಿಗೆದಾರರು ನೀವೆಂಬುದು ಇಡೀ ರಾಜ್ಯಕ್ಕೆ ತಿಳಿದಿದೆ, ನಿಮ್ಮ ಮಾತು "ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿದಂತೆ" ಇದೆ. ಸಿಬಿಐ ತನಿಖೆಗೆ ಹೆದರಿ ಹತಾಶ ಹೇಳಿಕೆಗಳನ್ನು ನೀಡುವ ಮೂಲಕ ವಿಷಯಾಂತರಗೊಳಿಸುವ ಮೂಲಕ ಜನರ ದಿಕ್ಕನ್ನು ತಪ್ಪಿಸುತ್ತಿರುವುದನ್ನು ನಿಲ್ಲಿಸಿ ಎಂದು ಕುಮಾರಸ್ವಾಮಿಗೆ ಟ್ವೀಟ್ ಮೂಲಕ ಟಾಂಗ್ ನೀಡಿದ್ದಾರೆ.

ಇಂದು ರಾಜ್ಯದಲ್ಲಿ ವರ್ಗಾವಣೆ ವಿಚಾರದಲ್ಲಿ ಬಿಡ್ಡಿಂಗ್ ನಡೆಸಲಾಗುತ್ತಿದೆ. ಯಡಿಯೂರಪ್ಪ ವರ್ಗಾವಣೆ ದಂಧೆಯಲ್ಲಿ ಬಿಡ್ಡಿಂಗ್  ನಿರ್ವಹಣೆ ಮಾಡಲು ತಮ್ಮ ಸುಪುತ್ರನನ್ನೇ ಬಿಟ್ಟಿದ್ದಾರೆ. ಈ ವಿಚಾರ ಇಡೀ ಸರ್ಕಾರದ ಅಧಿಕಾರಿಗಳಿಗೆ ಗೊತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ವಿಚಾರಗಳು ಹೊರಬರಲಿವೆ ಎಂದು ನಿನ್ನೆ ಉಡುಪಿಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದರು.

ಈ ಹಿಂದಿನ ಮೈತ್ರಿ ಸರ್ಕಾರ ವರ್ಗಾವಣೆ ದಂಧೆ ಮಾಡಿರುವುದಾಗಿ ದೂರಿದ್ದ ಯಡಿಯೂರಪ್ಪ ಪಟಾಲಂ, ಈಗ ಜೈಲಿಗೆ ಹೋಗಿ ಬಂದ ತಹಶೀಲ್ದಾರ್ ಒಬ್ಬರನ್ನು ಯಲಹಂಕಕ್ಕೆ ಪೋಸ್ಟಿಂಗ್ ಮಾಡಿದೆ. ಇದಕ್ಕಾಗಿ ಎಷ್ಟು ಹಣ ನಿಗದಿಪಡಿಸಿ ತಹಶೀಲ್ದಾರ್ ಅವರಿಂದ ಲೂಟಿ ಮಾಡಿದೆ ಎಂದು ಪ್ರಶ್ನಿಸಿದ್ದರು.

ಇದಕ್ಕೆ ಇಂದು ವಿಜಯೇಂದ್ರ, ಕಮಿಷನ್ ದಂಧೆ, ವರ್ಗಾವಣೆ ದಂಧೆ, ನೇಮಕಾತಿ ದಂಧೆಗಳ ಜನಕರು ಹಾಗೂ ಗುತ್ತಿಗೆದಾರರು ನೀವೆಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ ಎಂದು ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com