ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನ್ನ ಮೊದಲ ಶತ್ರು ಎಂದು ಹೇಳಿಲ್ಲ. ಈ ಬಗ್ಗೆ ಅನಗತ್ಯ ಗೊಂದಲ ಬೇಡ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ರವಿವಾರ ಈ ಸಂಬಂಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ‘ಡಿಜಿಟಲ್ ಮಾಧ್ಯಮದ ಪತ್ರಕರ್ತರಿಗೆ ಕೆಲವು ದಿನಗಳ ಹಿಂದೆ ನೀಡಿದ್ದ ಸಂದರ್ಶನವನ್ನು ಇಂದು ಕೆಲವು ವಿದ್ಯುನ್ಮಾನ ಮಾಧ್ಯಮಗಳು ತಿರುಚಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆ ಮುನ್ನ ಬಿಜೆಪಿಗಿಂತ ನಮ್ಮ ಪಕ್ಷವನ್ನು ಹೆಚ್ಚು ಟೀಕಿಸುತ್ತಿದ್ದರು ಎಂದು ಹೇಳಿದ್ದೆ. ಆದರೆ ಸಿದ್ದರಾಮಯ್ಯ ಅವರು ನನ್ನ ಮೊದಲ ಶತ್ರು ಎಂದಿರಲಿಲ್ಲ. ಆ ಬಗ್ಗೆ ಅನಗತ್ಯ ಗೊಂದಲ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಸ್ಛಾನದಿಂದ ತಮ್ಮನ್ನು ಕೆಳಗಿಳಿಸಲು ಕುತಂತ್ರ ರಾಜಕಾರಣ ಮಾಡಿರುವ ಸಿದ್ದರಾಮಯ್ಯ ಅವರೇ ನನ್ನ ಮೊದಲ ಶತ್ರು, ಬಿಜೆಪಿಯಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿರುವುದಾಗಿ ವರದಿಯಾಗಿತ್ತು.
ಕುಮಾರಸ್ವಾಮಿ ಹೀಗೆ ಹೇಳಿದ್ದಾರೆ ಎಂಬ ವರದಿ ಪ್ರಸಾರವಾದ ಬಳಿಕ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ "ಕುಮಾರಸ್ವಾಮಿ ನನ್ನನ್ನು ಶತ್ರುವಿನಂತೆ ನೋಡಿದ್ದೆ ಸಮಸ್ಯೆ ಆಗಿದ್ದು. ನನ್ನನ್ನು ಮಿತ್ರನಂತೆ ಅಥವಾ ಮೈತ್ರಿ ಪಕ್ಷದವರಂತೆ ನೋಡಿದಿದ್ದರೆ ಏನೂ ಆಗುತ್ತಿರಲಿಲ್ಲ," ಎಂದು ತಿರುಗೇಟು ನೀಡಿದ್ದರು.
Advertisement