ಬೆಂಗಳೂರು: ಜನರಿಗೆ ತೊಂದರೆ ಆಗುವ ನಿಟ್ಟಿನಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಂತೆ ಜೀರೋ ಟ್ರಾಫಿಕ್ ಸೌಲಭ್ಯ ಪಡೆಯುವುದಿಲ್ಲ ಎಂದು ನೂತನ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ವಿಕಾಸಸೌಧದ ಮೂರನೇ ಮಹಡಿಯ 344 ಕೊಠಡಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನನ್ನ ಮೇಲೆ ನಂಬಿಕೆ ಇಟ್ಟು ಜವಾಬ್ದಾರಿ ನೀಡಿದ್ದಾರೆ. ಇಂದು ಅಧಿಕೃತ ಕಚೇರಿಗೆ ಪೂಜೆ ಸಲ್ಲಿಸಿ ಕಚೇರಿ ಉದ್ಘಾಟಿಸಿದ್ದು, ನಾಳೆ ಅಧಿಕಾರಿಗಳ ಸಭೆ ಕರೆದು ಮುಂದಿನ ಕಾರ್ಯತಂತ್ರ ರಚಿಸಲಾಗುವುದು ಎಂದರು.
ಸಾರಿಗೆ ಇಲಾಖೆಯಲ್ಲಿ ಹಲವು ಲೋಪದೋಷಗಳಿದ್ದು, ಆದಾಯ ಸೋರಿಕೆ ತಡೆಗಟ್ಟಲು ಕ್ರಮ ಕೈಗೊಳ್ಳುತ್ತೇನೆ. ಇಲಾಖೆಯಲ್ಲಿ, ಆದಾಯ ಗಳಿಸುವುದಕ್ಕಿಂತ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವುದು ಮುಖ್ಯ. ರಾಜ್ಯದ ಎಲ್ಲೆಡೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಬಸ್ ಸೌಲಭ್ಯ ಲಭ್ಯವಾಗಬೇಕು. ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದಿದ್ದೇನೆ ಎಂದರು. ಇನ್ನೂ ಮತ್ತೊಬ್ಬ ಉಪಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥ ನಾರಾಯಣ ಕೂಡ ತಾವು ಜೀರೋ ಟ್ರಾಫಿಕ್ ಸೌಲಭ್ಯ ಪಡೆಯುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
Advertisement