ಮೈಸೂರು: ಉಪಚುನಾವಣೆ ಮತದಾನ ಅಂತ್ಯಗೊಂಡ ಬಳಿಕ ಇದೀಗ ಫಲಿತಾಂಶ ಕುರಿತು ರಾಜ್ಯದ ಮೂರು ಪ್ರಮುಖ ಪಕ್ಷಗಳಲ್ಲಿ ಆತಂಕ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತರಾಗಿ ಚುನಾವಣೋತ್ತರ ಸಮೀಕ್ಷೆ ನಡೆಸಲು ಪಕ್ಷಗಳು ಮುಂದಾಗಿವೆ ಎಂದು ವರದಿಗಳುತ ತಿಳಿಸಿವೆ.
ಕೆಲವು ಫಲಿತಾಂಶ ಕುರಿತು ಆತಂಕದಲ್ಲಿದ್ದರೆ, ಮತ್ತೆ ಕೆಲ ಅಭ್ಯರ್ಥಿಗಳು ರಿಲ್ಯಾಕ್ಸ್ ಮೂಡ್ ನಲ್ಲಿ ಎಂದಿನಂತೆ ತಮ್ಮ ಕಾರ್ಯಕ್ರಮ, ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.
ಉಪಚುನಾವಣೆ ಹಿನ್ನಲೆಯಲ್ಲಿ ಬಿಡುವಿಲ್ಲದೆ ಕಾರ್ಯನಿರತರಾಗಿದ್ದ ಅಭ್ಯರ್ಥಿಗಳು ಇದೀಗ ಸ್ವಲ್ಪ ವಿಶ್ರಾಂತಿಯಲ್ಲಿ ತೊಡಗಿಕೊಂಡಿದ್ದಾರೆ. ತಮ್ಮ ತಮ್ಮ ಕಾರ್ಯಕರ್ತರು ಹಾಗೂ ಬೆಂಬಲಿಗರನ್ನು ಭೇಟಿಯಾಗಿ ಸೋಲು ಗೆಲುವಿನ ಬಗ್ಗೆ ಲೆಕ್ಕಾಚಾರ ಮಾಡುತ್ತಿದ್ದಾರೆ. ಇನ್ನು ಕೆಲವರು ಈಗಲೇ ಟೆಂಪಲ್ ರನ್ ಶುರು ಮಾಡಿದ್ದಾರೆ.
ಗೋಕಾಕಾಕ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಅವರು ಕೊಲ್ಹಾಪುರ ಲಕ್ಷ್ಮೀ ದೇವಿ ದರ್ಶನ ಪಡೆಯಲು ತೆರಳಿದ್ದಾರೆ. ಇನ್ನು ಕೆಲ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಮನೆಯಲ್ಲಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಹಾಗೂ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಅವರೂ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ್ದಾರೆ.
ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರ ಜೊತೆ ಚರ್ಚೆ ನಡೆಸಿದ್ದಾರೆ. ಇದೇ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಸ್ವಲ್ಪ ಹೊತ್ತು ಅಡಕೆ ತೋಟ ಸುತ್ತಾಡಿ ಮನೆಯಲ್ಲಿ ಕಾರ್ಯಕರ್ತರ ಜೊತೆಚರ್ಚೆ ನಡೆಸಿದ್ದಾರೆ. ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೋಳಿವಾಡ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ.
ಫಲಿತಾಂಶದ ಬಗ್ಗೆ ಅಭ್ಯರ್ಥಿಗಳು ಹಾಗೂ ನಾಯಕರು ವಿಶ್ವಾಸ ವ್ಯಕ್ತಪಡಿಸುತ್ತಿದ್ದರೂ, ಜಾತಿ ಸಮೀಕರಣ ರೂಪಿಸುತ್ತಿದ್ದಾರೆ. ಒಕ್ಕಲಿಗರ ಮತಗಳ ಕುರಿತ ಜೆಡಿಎಸ್ ಕಾರ್ಯಕ್ಷಮತೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವಿಶ್ವನಾಥ್ ಅವರನ್ನು ಸೋಲಿಸಲು ಜೆಡಿಎಸ್ ಹಾಗೂ ಕಾಂಗ್ರೆಸ್ ಪಣತೊಟ್ಟಿದ್ದು, ಈ ಕಾರಣಕ್ಕೆ ಎರಡೂ ಪಕ್ಷಗಳು ಕೈಜೋಡಿಸಿವೆ ಎಂದು ಹೇಳಲಾಗುತ್ತಿದೆ. ಇದರಂತೆ ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದ ಮತಗಳು ಈ ಬಾರಿಯೂ ಆ ಪಕ್ಷಕ್ಕೇ ಹೋಗಿವೆಯೇ ಅಥವಾ ಮತಗಳು ವಿಂಗಡಣೆಯಾಗಿವೆಯೇ ಎಂಬುದರ ಬಗ್ಗೆ ಕಾಂಗ್ರೆಸ್ ಮಾಹಿತಿತ ಕಲೆ ಹಾಕುತ್ತಿದೆ.
ವಿಶ್ವಾಸಿಗರು ಈಗಾಗಲೇ ವರದಿಗಳನ್ನು ನೀಡಿದ್ದು, ಎಲ್ಲಾ ಸಮುದಾಯಗಳಲ್ಲೂ ಹಾಗೂ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ತಿಳಿಸಿದೆ ಎಂದು ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ್ ಗೌಡ ತಿಳಿಸಿದ್ದಾರೆ.
ಇದರಂತೆ ಬಿಜೆಪಿ ಕೂಡ ದಲಿತ ಸಮುದಾಯ ಯಾರಿಗೆ ಮತ ನೀಡಿದೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದೆ. ಜೆಡಿಎಸ್ ಮತದಾರರೂ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿಲ್ಲ. ಈ ಬಗ್ಗೆ ನಮಗೆ ಮಾಹಿತಿ ಬಂದಿದೆ. ಚುನಾವಣೋತ್ತರ ಸಮೀಕ್ಷಾ ವರದಿಯಿಂದ ಕಾಂಗ್ರೆಸ್ ನಾಯಕರು ಕಂಗಾಲಾಗಿದ್ದಾರೆ. ಜನರ ಪ್ರತಿಕ್ರಿಯೆ ಬಿಜೆಪಿ ಪರವಾಗಿದ ಎಂದು ಬಿಜೆಪಿ ನಾಯಕ ಸಿದ್ದರಾಜು ಹೇಳಿದ್ದಾರೆ.
ದಲಿತ ಕಾಲೋನಿಯಲ್ಲಿ ಬಿಜೆಪಿ ಹಾಗೂ ಸಂಘ ಪರಿವಾರ ಮಾಹಿತಿ ಸಂಗ್ರಹಿಸಿದ್ದು, ದಲಿತ ಹಾಗೂ ಬುಡಕಟ್ಟು ಪ್ರದೇಶಗಳಲ್ಲಿ ಬಿಜೆಪಿ ಉಪಸ್ಥಿತಿ ಇಲ್ಲದಿದ್ದರೂ ಈ ಪ್ರದೇಶದಲ್ಲಿಯೂ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಬಿಜೆಪಿ ನಾಯಕ ನಾಗರಾಜ್ ಅವರು ತಿಳಿಸಿದ್ದಾರೆ.
Advertisement