ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ದಿನೇಶ್ ಗುಂಡೂರಾವ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ಪಕ್ಷ ಈ ಸ್ಥಾನಗಳಿಗೆ ಹೊಸಬರ ಹುಡುಕಾಟ ನಡೆಸುತ್ತಿದೆ.
ಒಕ್ಕಲಿಗ ಸಮುದಾಯದ ಪ್ರಭಾವಿ ಮುಖಂಡ ಡಿಕೆ ಶಿವಕುಮಾರ್, ಲಿಂಗಾಯಿತ ಸಮುದಾಯದ ಎಚ್ ಕೆ ಪಾಟೀಲ್ , ದಲಿತ ಸಮುದಾಯದ ಡಾ. ಜಿ. ಪರಮೇಶ್ವರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಹಾಗೂ ಮಾಜಿ ಸಚಿವ ಎಂ. ಬಿ. ಪಾಟೀಲ್ ಅವರ ಹೆಸರುಗಳೂ ಪ್ರಬಲವಾಗಿ ಕೇಳಿಬರುತ್ತಿದೆ.
ಪೌರತ್ವ ತಿದ್ದುಪಡಿಗೆ ಸಂಬಂಧಿಸಿದಂತೆ ನಿನ್ನೆ ಕಾಂಗ್ರೆಸ್ ಕಚೇರಿ ಬಳಿ ನಡೆದ ಪ್ರತಿಭಟನೆ ವೇಳೆ ಯಾವುದೇ ನಾಯಕರು ಇರಲಿಲ್ಲ. ಕೊನೆಯದಾಗಿ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಮಧ್ಯೆ ಮುನಿಯಪ್ಪ ಹೆಸರು ಕೂಡಾ ಮುಂಚೂಣಿಯಲ್ಲಿದೆ.
ಸಿದ್ದರಾಮಯ್ಯ ಆಪ್ತ ಹಾಗೂ ಲಿಂಗಾಯಿತ ಸಮುದಾಯದ ಪ್ರಭಾವಿ ಮುಖಂಡರಾಗಿರುವ ಎಂಬಿ ಪಾಟೀಲ್ ಅವರು ಕೂಡಾ ಈ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ.
ಪ್ರಸ್ತುತ ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ಹೀನಾಯವಾಗಿದೆ. 2018ರ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯ ನಂತರ ಪಕ್ಷ ಅಧೋಗತಿಗೆ ತಲುಪಿಸಿದೆ. ಉಪ ಚುನಾವಣೆ ಬಳಿಕ ಇದರ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಸಿಎಲ್ ಪಿ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷರಾಗುವ ಮೇಲೆ ಪಕ್ಷ ಸಂಘಟನೆಯ ಜವಾಬ್ದಾರಿ ಹೆಚ್ಚಾಗಿದೆ. ಈ ಎಲ್ಲಾ ಆಯಾಮಗಳಲ್ಲಿ ನೂತನ ಪಕ್ಷದ ಅಧ್ಯಕ್ಷರನ್ನು ನೇಮಿಸುವ ಅಗತ್ಯವಿದ್ದು, ಹೈಕಮಾಂಡ್ ಕೈಗೊಳ್ಳುವ ತೀರ್ಮಾನ ತೀವ್ರ ಕುತೂಹಲಕ್ಕೆ ಕಾರಣವಾಗಲಿದೆ.
Advertisement