ಬೆಂಗಳೂರು: ರಾಜ್ಯ ಮಂತ್ರಿಮಂಡಲ ವಿಸ್ತರಣೆ ಮತ್ತೊಂದು ವಾರ ವಿಳಂಬವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಇಲಾಖಾ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರ ಜತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲು ಒಂದು ವಾರದ ನಂತರ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜಾರ್ಖಂಡ್ ಚುನಾವಣಾ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಹೀಗಾಗಿ ಇನ್ನೊಂದು ವಾರದ ತರುವಾಯ ದೆಹಲಿಗೆ ತೆರಳುವುದಾಗಿ ಸ್ಪಷ್ಟಪಡಿಸಿದರು.
ಡಿಸೆಂಬರ್ 22 ರ ನಂತರ ಮಂತ್ರಿಮಂಡಲ ವಿಸ್ತರಣೆಯಾಗಲಿದೆ. ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇನೆ. ನನ್ನ ಮಾತಿಗೆ ಬದ್ಧ. ಹೀಗಾಗಿ ಯಾರೂ ಆತಂಕಗೊಳ್ಳುವ ಅಗತ್ಯವಿಲ್ಲ. ಕೊಟ್ಟ ವಾಗ್ದಾನ ಈಡೇರಿಸುತ್ತೇನೆ ಎಂದರು.
ಬಹುದಿನಗಳಿಂದ ತಳವಾರ, ಪರಿವಾರ, ಸಿದ್ಧಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಬೇಡಿಕೆ ಸಾಕಾರಗೊಂಡಿದ್ದು, ಇದರಿಂದ ರಾಜ್ಯದ 12 ಲಕ್ಷ ಜನರಿಗೆ ಅನುಕೂಲವಾಗಲಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರನ್ನು ಈ ಜನಾಂಗದ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದರು.
Advertisement