ಕೇಂದ್ರದ ನೆರವಿನೊಂದಿಗೆ ರಾಜ್ಯ ಬಿಜೆಪಿ ಕುದುರೆ ವ್ಯಾಪಾರ, ಇದಕ್ಕೆ ನಮ್ಮ ಬಳಿ ಸಾಕ್ಷಿ ಇದೆ: ಡಿ.ಕೆ.ಸುರೇಶ್

ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವ ರಾಜ್ಯ ಬಿಜೆಪಿ ನಮ್ಮ ಪಕ್ಷದ ಶಾಸಕರಿಗೆ 30-40 ಕೋಟಿ ರು ಆಮೀಷವೊಡ್ಡಿ ರಾಜಿನಾಮೆ ನೀಡುವಂತೆ ಒತ್ತಾಯಿಸುತ್ತಿದೆ...
ಡಿ.ಕೆ ಸುರೇಶ್
ಡಿ.ಕೆ ಸುರೇಶ್
ನವದೆಹಲಿ: ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿರುವ ರಾಜ್ಯ ಬಿಜೆಪಿ ನಮ್ಮ ಪಕ್ಷದ ಶಾಸಕರಿಗೆ 30-40 ಕೋಟಿ ರು ಆಮೀಷವೊಡ್ಡಿ ರಾಜಿನಾಮೆ ನೀಡುವಂತೆ ಒತ್ತಾಯಿಸುತ್ತಿದೆ, ಇದಕ್ಕೆ ನಮ್ಮ ಬಳಿ ಸಾಕ್ಷಿ ಇದೆ ಎಂದು ಸಂಸದ ಡಿ,ಕೆ ಸುರೇಶ್ ಆರೋಪಿಸಿದ್ದಾರೆ.
ದೆಹಲಿಯ ಕರ್ನಾಟಕ ಭವನದ ಎದುರು ಸುದ್ದಿಗೋಷ್ಠಿ ನಡೆಸಿದ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಮುಂಬೈನಲ್ಲಿ ನಮ್ಮ ಕೆಲವು ಶಾಸಕರನ್ನು ಕೂಡಿಹಾಕಲಾಗಿದೆ. ನೀವು ನಮ್ಮ ಮಾತು ಕೇಳಿಲ್ಲ ಅಂದರೆ ನಿಮ್ಮ ರಾಜಕೀಯ ಜೀವನ ಮುಗಿಸುತ್ತೇವೆ ಎಂದು ಬಿಜೆಪಿಯಿಂದ ಬೆದರಿಕೆ ಹಾಕಲಾಗುತ್ತಿದೆ. ಈ ಕುರಿತು ದಾಖಲೆಗಳು ನಮ್ಮ ಬಳಿ ಇವೆ ಎಂದು ಡಿ.ಕೆ. ಸುರೇಶ್ ಹೇಳಿದ್ದಾರೆ.
ಆಪರೇಷನ್​ ಕಮಲದ ಕುರಿತು ರಾಷ್ಟ್ರದ ಗಮನ ಸೆಳೆಯಬೇಕು ಎಂದು ಈ ತುರ್ತು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದೇವೆ. ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೇಲೆ ರಾಷ್ಟ್ರದಲ್ಲಿ ಮತ್ತು ರಾಜ್ಯದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಿಜೆಪಿ ನಾಯಕರು ಬುಡಮೇಲು ಮಾಡುತ್ತಿದ್ದಾರೆ ಎಂಬುದು ಆಗಿಂದಾಗ್ಗೆ ಸಾಬೀತಾಗುತ್ತಿದೆ.
ಕಳೆದ ಆರು ತಿಂಗಳಿಂದ ರಾಜ್ಯ ಸರ್ಕಾರವನ್ನು ಪತನಗೊಳಿಸಲು ರಾಜ್ಯನಾಯಕರು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಇವರಿಗೆ ಬಿಜೆಪಿ ರಾಷ್ಟ್ರೀಯ ನಾಯಕರು ಮತ್ತು ಮಹಾರಾಷ್ಟ್ರ ಸರ್ಕಾರ ನೆರವು ನೀಡುತ್ತಿದೆ ಎಂದು ಆಪಾದಿಸಿದ್ದಾರೆ.
ನಮ್ಮ ಶಾಸಕರಿಗೆ ಬಿಜೆಪಿ ಮುಖಂಡರು ಹಣದ ಆಮೀಷ ಒಡ್ಡಿರುವ ವಿಡಿಯೋ ನಮ್ಮ ಬಳಿಯಿದೆ, ಸೂಕ್ತ ಸಮಯದಲ್ಲಿ ಅದನ್ನು ಬಿಡುಗಡೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ತನಿಖೆ ನಡೆಸಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರತ್ಯೇಕ ತನಿಖಾ ತಂಡ ರಚಿಸಬೇಕೆಂದು ಒತ್ತಾಯಿಸಿದ್ದಾರೆ. 
ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡಲು ಬಿಜೆಬಿ ಸದಸ್ಯರು ಬಿಡಲಿಲ್ಲ. ಆ ಮೂಲಕ ಬಿಜೆಪಿ ಸಂಸದರು ರಾಜ್ಯಪಾಲರಿಗೆ ಅಗೌರವ ತೋರಿದ್ದಾರೆ. ಜತೆಗೆ ಕಳೆದ 8 ತಿಂಗಳಿಂದ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ಸರಿಯಾಗಿ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಜೆಡಿಎಸ್​ ಸಂಸದ ಕುಪೇಂದ್ರ ರೆಡ್ಡಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿದರು.
ಜನಾದೇಶ ಇರುವ ಸರ್ಕಾರವನ್ನು ಅಸ್ಥಿರಗೊಳಿಸಿಸುವ ಪ್ರಯತ್ನ ಕರ್ನಾಟಕದಲ್ಲಿ ನಡೆಯುತ್ತಿದೆ. ಇದನ್ನು ತಡೆಯಲು ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕು ಎಂದು ಸಂಸದ ವಿ. ಉಗ್ರಪ್ಪ ಒತ್ತಾಯಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com