ಬುಧವಾರದ ಸುಪ್ರೀಂಕೋರ್ಟ್ ತೀರ್ಪು ಪ್ರಕಟವಾದ ಬೆನ್ನಲ್ಲೇ ಮೈತ್ರಿ ಕೂಟದ ನಾಯಕರು ದಿಢೀರ್ ರಂಗಪ್ರವೇಶ ಮಾಡಿ, ಹಲವು ಸುತ್ತಿನ ಕಾರ್ಯಾಚರಣೆ ನಡೆಸಿದರು. ಈ ವೇಳೆ ಸಭಾಧ್ಯಕ್ಷರನ್ನು ಭೇಟಿ ಮಾಡಿ, ರಾಮಲಿಂಗಾರೆಡ್ಡಿ ಅವರನ್ನು ಹೊರತುಪಡಿಸಿ ತಮ್ಮ ಪಕ್ಷದ 12 ಶಾಸಕರು ಹಾಗೂ ಪಕ್ಷೇತರ ಶಾಸಕ ಆರ್. ಶಂಕರ್ ಅವರನ್ನು ಅನರ್ಹಗೊಳಿಸಬೇಕು ಎಂದು ದಾಖಲೆ ಸಮೇತ ಮನವಿ ಸಲ್ಲಿಸಿದರು. ಅಲ್ಲದೇ, ವಿಶ್ವಾಸ ಮತದ ಮೇಲಿನ ಚರ್ಚೆಗೆ ಸಮಯಾವಕಾಶವನ್ನೂ ಕೇಳಿದರು ಎನ್ನಲಾಗಿದೆ.