ಸದನದಲ್ಲಿ ಭಾಗವಹಿಸುವಂತೆ ತಮ್ಮ ಪಕ್ಷದ ಶಾಸಕರಿಗೆ ವಿಪ್ ಜಾರಿಗೊಳಿಸುವ ಅಧಿಕಾರ ಶಾಸಕಾಂಗ ಪಕ್ಷದ ನಾಯಕರಿಗಿದೆ. ಇದನ್ನು ಸಂವಿಧಾನದ ಶೆಡ್ಯೂಲ್ 10ರಲ್ಲಿ ಸ್ಪಷ್ಟಪಡಿಸಲಾಗಿದೆ. ಈ ಜವಾಬ್ದಾರಿಯನ್ನು ಮೊಟಕುಗೊಳಿಸುವುದಿಲ್ಲ ಎಂದು ಹೇಳುವ ಮೂಲಕ ಎಲ್ಲಾ ಶಾಸಕರಿಗೂ ವಿಪ್ ಜಾರಿಗೊಳಿಸಬಹುದು ಎಂದು ಪರೋಕ್ಷವಾಗಿ ಹೇಳಿದರು.
ಸುಪ್ರೀಂ ಕೋರ್ಟ್ ಸ್ಪೀಕರ್ ಅಧಿಕಾರ ವ್ಯಾಪ್ತಿಯ ಬಗ್ಗೆ ನೇರವಾಗಿ ಮತ್ತು ಅಷ್ಟೇ ಸ್ಪಷ್ಟವಾಗಿ ತೀರ್ಪು ಹೊರಡಿಸಿದೆ, ಅದರಲ್ಲಿ ಯಾವುದೇ ಅನುಮಾನವಿಲ್ಲ, ಸುಪ್ರೀಂ ಕೋರ್ಟ್ ನ ಆದೇಶವನ್ನು ಪರಿಶೀಲಿಸಿ ನಾನು ಇವತ್ತು ಆದೇಶ ಹೊರಡಿಸುತ್ತಿದ್ದೇನೆ ಎಂದರು.
ಸದನದ ಕಲಾಪವನ್ನು ಇದೇ ರೀತಿ ಮುಂದೂಡುತ್ತಾ ಕಾಲಹರಣ ಮಾಡುವುದರಲ್ಲಿ
ಅರ್ಥವಿಲ್ಲ. ಹೊರಗೆ ಜನ ನಮ್ಮನ್ನು ಗಮನಿಸುತ್ತಿದ್ದಾರೆ, ಇಲ್ಲಿಂದ ತಪ್ಪು ಸಂದೇಶ ಹೋಗಬಾರದು, ಈ ಪ್ರಕರಣದಲ್ಲಿ ನನ್ನನ್ನು ಬಲಿಪಶು ಮಾಡಬೇಡಿ, ನಿಮ್ಮ ವ್ಯಕ್ತಿತ್ವಕ್ಕೂ ಧಕ್ಕೆ ತಂದುಕೊಳ್ಳಬೇಡಿ, ಸದನದ ಗೌರವಕ್ಕೆ ಚ್ಯುತಿ ತರಬೇಡಿ ಎಂದು ಕಾಂಗ್ರೆಸ್-ಜೆಡಿಎಸ್ ಸದಸ್ಯರಿಗೆ ವಿಶ್ವಾಸಮತ ಯಾಚನೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಹೇಳಿದರು.
ಅತೃಪ್ತ ಶಾಸಕರು ತಮಗೆ ಬೆದರಿಕೆಯಿದೆ, ಅಪಾಯವಿದೆ ಎಂದು ಹೇಳಿದರೆ ಅವರಿಗೆ ಭದ್ರತೆ ಒದಗಿಸುವುದು ನನ್ನ ಜವಾಬ್ದಾರಿ ಎಂದು ಕೂಡ ಸ್ಪೀಕರ್ ಸ್ಪಷ್ಟಪಡಿಸಿದರು.