ರಾಜಕೀಯ
ನಿಮ್ಮ ರಾಜಕೀಯ ಭವಿಷ್ಯ ಕಾಪಾಡುವೆ: ಅತೃಪ್ತ ಶಾಸಕರಿಗೆ ಬಿಎಸ್ ವೈ ಭರವಸೆ
ಸದ್ಯ ಮುಂಬೈನಲ್ಲಿ ಬೀಡುಬಿಟ್ಟಿರುವ ಅತೃಪ್ತ ಶಾಸಕರ ಮುಂದಿನ ರಾಜಕೀಯ ಭವಿಷ್ಯ ಕಾಪಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು...
ಬೆಂಗಳೂರು: ಸದ್ಯ ಮುಂಬೈನಲ್ಲಿ ಬೀಡುಬಿಟ್ಟಿರುವ ಅತೃಪ್ತ ಶಾಸಕರ ಮುಂದಿನ ರಾಜಕೀಯ ಭವಿಷ್ಯ ಕಾಪಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದ ಕಾಂಗ್ರೆಸ್ – ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ವಿಧಾನಸಭೆಯಲ್ಲಿ ಬಹುಮತ ಕಳೆದುಕೊಂಡು ಪತನಗೊಂಡ ನಂತರ ಅತೃಪ್ತ ಶಾಸಕರ ಹಿತ ಕಾಪಾಡುವ ವಿಚಾರದಲ್ಲಿ ಯಡಿಯೂರಪ್ಪನವರು ಇಂದು ರಾಜ್ಯದ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು ಎನ್ನಲಾಗಿದೆ.
ಯಡಿಯೂರಪ್ಪ ಅವರು ಕಾನೂನು ತಜ್ಞರೊಂದಿಗೆ ಚರ್ಚಿಸಿದ ಬಳಿಕ ಮುಂಬೈನಲ್ಲಿ ಬೀಡುಬಿಟ್ಟಿರುವ 15 ಅತೃಪ್ತ ಶಾಸಕರಿಗೆ ಮುಂದಿನ ರಾಜಕೀಯ ಭವಿಷ್ಯ ಕಾಪಾಡುವ ಭರವಸೆ ಕೊಟ್ಟಿದ್ದಾರೆ ಎಂದು ಹೇಳಲಾಗಿದೆ.
ವಿಧಾನಸಭೆಯಲ್ಲಿ ನಿನ್ನೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡ ನಂತರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ರಾಜೀನಾಮೆ ನಂತರ ರಾಜ್ಯದ ರಾಜಕೀಯ ಹಲವು ತಿರುವುಗಳನ್ನು ಪಡೆದುಕೊಂಡಿತ್ತು. ಅಂತಿಮವಾಗಿ 14 ತಿಂಗಳ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಮಂಗಳವಾರ ರಾಜೀನಾಮೆ ನೀಡಿ ನಿರ್ಗಮಿಸಿತ್ತು.