ಪಕ್ಷೇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಸುಪ್ರೀಂ ಕೋರ್ಟ್‌

ಕಾಲಮಿತಿಯೊಳಗೆ ವಿಶ್ವಾಸಮತ ಯಾಚನೆಗೆ ಸೂಚಿಸಬೇಕು ಎಂದು ಕೋರಿ ಪಕ್ಷೇತರ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ಮುಂದೂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಕಾಲಮಿತಿಯೊಳಗೆ ವಿಶ್ವಾಸಮತ ಯಾಚನೆಗೆ ಸೂಚಿಸಬೇಕು ಎಂದು ಕೋರಿ ಪಕ್ಷೇತರ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ಮುಂದೂಡಿದೆ.
ಕರ್ನಾಟಕ ವಿಧಾನಸಭೆಯಲ್ಲಿ ನಿನ್ನೆ ವಿಶ್ವಾಸಮತ ಯಾಚನೆ ನಡೆದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಅರ್ಜಿಯನ್ನು ಮುಂದೂಡಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ನೇತೃತ್ವದ ಪೀಠ ಇಂದು ಬೆಳಗ್ಗೆ ಕಲಾಪ ಆರಂಭಿಸಿದಾಗ ಅರ್ಜಿದಾರರು ಮತ್ತು ಪ್ರತಿವಾದಿಗಳ ವಕೀಲರು ಇಲ್ಲದನ್ನು ಕಂಡು ವಿಚಾರಣೆಯನ್ನು ಮುಂದೂಡಿದೆ.
ಅತೃಪ್ತರ ಪರ ಅರ್ಜಿ ಸಲ್ಲಿಸಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಇಂದು ಸುಪ್ರೀಂಕೋರ್ಟ್‌ಗೆ ಹಾಜರಾಗಿರಲಿಲ್ಲ.  ಕಲಾಪ ಆರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲ ರೋಹಟಗಿ ಮತ್ತು ಸ್ಪೀಕರ್ ಪರ ವಕೀಲ ಸಿಂಘ್ವಿ ಗೈರು ಹಾಜರಾಗಿದ್ದನ್ನು ಕಂಡ ಪೀಠ, ನಾವು ಅವರ ಉಪಸ್ಥಿತಿಯಲ್ಲಿ ತೀರ್ಪು ಪ್ರಕಟಿಸುತ್ತೇವೆ ಎಂದು ಹೇಳಿ ವಿಚಾರಣೆಯನ್ನು ಮುಂದೂಡಿತು.
ಹಾಲಿ ರಾಜಕೀಯ ಬೆಳವಣಿಗೆ ಬಳಿಕ ತಾವು ಸಲ್ಲಿಸಿದ್ದ ಅರ್ಜಿ ವಾಪಸ್ ಪಡೆಯಲು ಮುಂದಾದ ಪಕ್ಷೇತರರು
ಇನ್ನು ದೋಸ್ತಿ ಸರ್ಕಾರ ವಿಶ್ವಾಸ ಮತ ಯಾಚನೆ ಮಾಡಿದ್ದು, ಅದರಲ್ಲಿ ವಿಫಲವಾಗಿ ಸರ್ಕಾರ ಉರುಳಿರುವುದರಿಂದ ಪಕ್ಷೇತರರು ತಾವು ಸಲ್ಲಿಸಿದ್ದ ಅರ್ಜಿಯ ವಾಪಸ್ ಪಡೆಯಲು ಮುಂದಾಗಿದ್ದಾರೆ. ಆದರೆ ಪ್ರಸ್ತುತ ಪಕ್ಷೇತರ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಮತ್ತು ಸ್ಪೀಕರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರ ಗೈರು ಹಾಜರಾತಿಯಲ್ಲಿ ಯಾವುದೇ ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಪೀಠ ಅರ್ಜಿ ವಿಚಾರಣೆ ಮುಂದೂಡಿದೆ.
ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕರ್ನಾಟಕ ವಿಧಾನಸಭೆಯಲ್ಲಿ ಮಂಡಿಸಿದ್ದ ವಿಶ್ವಾಸಮತ ನಿರ್ಣಯ ಬಿದ್ದು ಹೋಗಿ ಸರ್ಕಾರ ಪತನಗೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com