ಆದರೆ ಕಳೆದ ವರ್ಷ ರಾಜ್ಯ ಮೈತ್ರಿ ಸರ್ಕಾರದಲ್ಲಿ ಸೂಕ್ತ ಪ್ರಾತಿನಿಧ್ಯ ಸಿಗಲಿಲ್ಲವೆಂದು ಅಸಮಾಧಾನಗೊಂಡು, ಚಿಂಚೋಳಿ ಕ್ಷೇತ್ರದಲ್ಲಿ ಆದ ಬೆಳವಣಿಗೆಗಳು, ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಪ್ರಿಯಾಂಕ್ ಖರ್ಗೆಯವರಿಂದ ನಿರ್ಲಕ್ಷ್ಯಕ್ಕೊಳಗಾಗಿದ್ದೇನೆ ಎಂದು ಭಾವಿಸಿ ಬಂಡಾಯವೆದ್ದು ಬದಲಿ ದಾರಿ ಹುಡುಕುತ್ತಿದ್ದರು. ಇದೇ ಹೊತ್ತಿಗೆ ಭಾರತೀಯ ಜನತಾ ಪಾರ್ಟಿಯಿಂದ ಜಾಧವ್ ಗೆ ಆಫರ್ ಸಿಕ್ಕಿತು. ಚಿಂಚೋಳಿ ಕ್ಷೇತ್ರಕ್ಕೆ ರಾಜೀನಾಮೆ ನೀಡಿದರೆ ಅವರ ಪುತ್ರ ಅವಿನಾಶ್ ಜಾಧವ್ ಗೆ ಟಿಕೆಟ್ ಕೊಡಿಸುವುದಾಗಿ ಬಿಜೆಪಿ ಹೈಕಮಾಂಡ್ ನಿಂದಲೇ ವಾಗ್ದಾನ ಸಿಕ್ಕಿತು. ಕೂಡಲೇ ಕಾಂಗ್ರೆಸ್ ಗೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದರು. ತಮ್ಮನ್ನು ರಾಜಕೀಯಕ್ಕೆ ಕರೆತಂದ ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧವೇ ಸ್ಪರ್ಧಿಸಿ ಗೆದ್ದುಬಂದರು. ಇತ್ತ ಅವರ ಪುತ್ರರೂ ಚಿಂಚೋಳಿ ಶಾಸಕರಾದರು.