ಕಾಂಗ್ರೆಸ್ ಹಾಲಿ ಸಂಸದರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡುವುದಿಲ್ಲ: ಸಿದ್ದರಾಮಯ್ಯ

ದೋಸ್ತಿಗಳ ಮಧ್ಯೆ ಸೀಟು ಹಂಚಿ ಗೊಂಲದ ಇನ್ನೂ ಮುಂದುವರೆದಿದ್ದು, ಕಾಂಗ್ರೆಸ್ ನ ಹಾಲಿ ಸಂಸದರ ಕ್ಷೇತ್ರಗಳನ್ನು ಜಿಡಿಎಸ್ ಗೆ ಬಿಟ್ಟುಕೊಡುವುದಿಲ್ಲ ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ನವದೆಹಲಿ: ದೋಸ್ತಿಗಳ ಮಧ್ಯೆ ಸೀಟು ಹಂಚಿ ಗೊಂಲದ ಇನ್ನೂ ಮುಂದುವರೆದಿದ್ದು, ಕಾಂಗ್ರೆಸ್ ನ ಹಾಲಿ ಸಂಸದರ ಕ್ಷೇತ್ರಗಳನ್ನು ಜಿಡಿಎಸ್ ಗೆ ಬಿಟ್ಟುಕೊಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ಇಂದು ದೆಹಲಿಯಲ್ಲಿ ಸ್ಕ್ರೀನಿಂಗ್​ ಕಮಿಟಿ ಸಭೆಗೆ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಈಗಾಗಲೇ ನಮ್ಮ ಸಂಸದರು ಪ್ರತಿನಿಧಿಸುತ್ತಿರುವ ಯಾವುದೇ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡದಂತೆ ಹೈಕಮಾಂಡ್ ತಿಳಿಸಲಾಗಿದೆ. ಅಲ್ಲದೆ ಈ ವಿಚಾರವನ್ನು ಜಿಡಿಎಸ್ ಗೂ ತಿಳಿಸಲಾಗಿದೆ ಎಂದರು.
ಇದೇ ವೇಳೆ ಮಂಡ್ಯದಿಂದ ಸುಮಲತಾ ಅವರಿಗೆ ಸಿದ್ದರಾಮಯ್ಯ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಸುಮಲತಾಗೆ ಕಾಂಗ್ರೆಸ್​ನಿಂದ ಟಿಕೆಟ್​ ನೀಡುವುದಿಲ್ಲ ಎಂದು ಹೇಳಿದ್ದೇ ನಾನು. ಅಲ್ಲಿನ ಸ್ಪರ್ಧೆಯ ಬಗ್ಗೆ ಈ ಮೊದಲೇ ನಿರ್ಧಾರವಾಗಿತ್ತು. ಹಾಗಿದ್ದಮೇಲೆ ನಾನ್ಯಾಕೆ ಸುಮಲತಾಗೆ ಪರೋಕ್ಷ ಬೆಂಬಲ ನೀಡುತ್ತೇನೆ? ಹಾಗೇನಾದರೂ ಇದ್ದಿದ್ದರೆ ನೇರವಾಗೇ ಹೇಳುತ್ತಿದ್ದೆ ಎಂದರು.
ಕುಟುಂಬ ರಾಜಕಾರಣ ಮೈತ್ರಿ ಮೇಲೆ ದುಷ್ಪರಿಣಾಮ ಬೀರುವುದಿಲ್ಲ. ಮಂಡ್ಯದಲ್ಲಿ ನಿಖಿಲ್, ಹಾಸನದಲ್ಲಿ ಪ್ರಜ್ವಲ್ ಕಣಕ್ಕಿಳಿಸುವುದು ಜೆಡಿಎಸ್ ಪಕ್ಷದ ನಿರ್ಧಾರ. ಅವರ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಾವು ನಿರ್ದೇಶನ ಅಥವಾ ಸಲಹೆ ಸೂಚನೆ ನೀಡಲಾಗುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಕಾಂಗ್ರೆಸ್​ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಸ್ಕ್ರೀನಿಂಗ್​ ಕಮಿಟಿ ಸಭೆಯಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದು, ಇಂದೇ ಪಕ್ಷದ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.
ಸಭೆಯಲ್ಲಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ, ಸಚಿವ ಡಿ.ಕೆ. ಶಿವಕುಮಾರ್,  ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವರಾದ ಕೆ.ಎಚ್. ಮುನಿಯಪ್ಪ, ವೀರಪ್ಪ ಮೊಯಿಲಿ ಮತ್ತಿತರರು ಭಾಗಿಯಾಗಿದ್ದಾರೆ.
ಕಾಂಗ್ರೆಸ್ ಹಾಲಿ ಸಂಸದರ ಕ್ಷೇತ್ರಗಳನ್ನು ಬಿಟ್ಟುಕೊಡವುದಿಲ್ಲ ಎಂಬ ಸ್ಪಷ್ಟ ಸಂದೇಶದ ನಡುವೆಯೂ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಕ್ಷೇತ್ರಗಳಿಗೆ ಜೆಡಿಎಸ್ ಒತ್ತಡ ಹಾಕುತ್ತಿರುವ ಬಗ್ಗೆಯೂ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com