ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗೆ ಕಾಂಗ್ರೆಸ್ ಬಾಕಿ ಉಳಿದಿದ್ದ ಆರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ.
ಈ ಹಿಂದೆ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ, ಆರು ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿತ್ತು. ಇದೀಗ ಆರು ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.
ಶಿವಾಜಿನಗರದಿಂದ ಕೊನೆಗೂ ರಿಜ್ವಾನ್ ಅರ್ಷದ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.ಶಿವಾಜಿ ನಗರ ಕ್ಷೇತ್ರದಿಂದ ಉಪ ಚುನಾವಣೆಗೆ ಸ್ಪರ್ಧಿಸಲು ದಿನೇಶ್ ಗುಂಡೂರಾವ್ ಪತ್ನಿ ಟಬು ದಿನೇಶ್ ಗುಂಡೂರಾವ್ ಹೆಸರು ಕೇಳಿ ಬರುತ್ತಿತ್ತು.
ಶಿವಾಜಿ ನಗರ ಕ್ಷೇತ್ರದಿಂದ ಸ್ಪರ್ಧೆಗೆ ಸಾಕಷ್ಟು ಆಕಾಂಕ್ಷಿಗಳಿದ್ದರು. ಆದರೆ ರಿಜ್ವಾನ್ ಅರ್ಷದ್ಗೆ ಪಕ್ಷದಲ್ಲಿ ಸಾಕಷ್ಟು ವಿರೋಧ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇಲ್ಲ ಎಂದು ಹೇಳಲಾಗುತಿತ್ತು. ಆದಾಗ್ಯೂ, ಅಂತಿಮವಾಗಿ ಅವರಿಗೆ ಟಿಕೆಟ್ ನೀಡಲಾಗಿದೆ.
ರಿಜ್ವಾನ್ ಅರ್ಷದ್ ಈ ವಿಷಯವನ್ನು ಟ್ವೀಟರ್ ನಲ್ಲಿ ಖಚಿತಪಡಿಸಿದ್ದು, ತಮ್ಮ ಉಮೇದುವಾರಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಶಿವಾಜಿನಗರ ಜನರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
Advertisement