ಮೈಸೂರು: ಉಪಚುನಾವಣೆ ಹತ್ತಿರ ಬರುತ್ತಿದ್ದು, ರಾಜಕೀಯ ಪಕ್ಷಗಳ ಪ್ರಚಾರಗಳು ಬಿರಿಸಿನಿಂದ ಸಾಗುತ್ತಿದೆ. ಕೆಆರ್.ಪೇಟೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಹಾಗೂ ಭಾರತೀಯ ಜನತಾ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿವೈ.ವಿಜಯೇಂದ್ರ ಅವರು ಭರ್ಜರಿ ಪ್ರಚಾರ ನಡೆಸಲು ಸಿದ್ಧತೆಗಳನ್ನು ನಡೆಸಿದ್ದಾರೆ.
ಜೆಡಿಎಸ್ ಭದ್ರಕೋಟೆಯಾಗಿರುವ ಕೆ.ಆರ್.ಪೇಟೆಯಲ್ಲಿ ತನ್ನ ಖಾತೆಯನ್ನು ತೆರೆಯಲು ಬಿಜೆಪಿ ಬಹಳ ಉತ್ಸುಕವಾಗಿದೆ. ಜನಾದೇಶಕ್ಕೆ ವಿರುದ್ಧವಾಗಿ ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಹರಿಹಾಯಲು ಬಿಜೆಪಿ ಸನ್ನದ್ಧವಾಗಿದೆ.
ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ಕಾರ್ಯಗಳನ್ನು ಯಡಿಯೂರಪ್ಪ ಅವರು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದಾರೆ. ಮಂಡ್ಯ ಕ್ಷೇತ್ರ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ವಿಶೇಷ ಆಸಕ್ತಿಯನ್ನು ನೀಡಿದ್ದಾರೆ. 2008ರಲ್ಲಿ ಅಧಿಕಾರದಲ್ಲಿದ್ದಾಗ ಯಡಿಯೂರಪ್ಪ ಅವರು ಕೆ.ಆರ್.ಪೇಟೆಗೆ ರೂ.800 ಕೋಟಿ ಬಿಡುಗಡೆ ಮಾಡಿದ್ದರು ಎಂದು ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.
ಕ್ಷೇತ್ರ ಅಭಿವೃದ್ಧಿಯಾಗಬೇಕೆಂಬ ಉದ್ದೇಶದಿಂದ ಕೆ.ಸಿ.ನಾರಾಯಣ ಗೌಡ ಅವರು ರಾಜೀನಾಮೆ ನೀಡಿದ್ದರು ಎಂದಿದ್ದಾರೆ. ಇದೇ ವೇಳೆ ಸಂಸದೆ ಸುಮಲತಾ ಅವರು ಯಾರಿಗೆ ಬೆಂಬಲ ನೀಡುತ್ತಾರೆಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಡಿಯೂರಪ್ಪ ಅವರು ಈಗಾಗಲೇ ಸುಮಲತಾ ಅವರಿಗೆ ಮಾತುಕತೆ ನಡೆಸಿದ್ದಾರೆ. ಆದರೆ, ಬೆಂಬಲ ನೀಡುವುದು ಸುಮಲತಾ ಅವರ ಆಯ್ಕೆಗೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ.
Advertisement