ದಾವಣಗರೆ/ಬಳ್ಳಾರಿ: ರಾಜ್ಯದಲ್ಲಿ ನಡೆಯುತ್ತಿರವ ಉಪ ಚುನಾವಣೆ ಬಳಿಕ ರಾಜ್ಯ ಬಿಜೆಪಿ ಸರ್ಕಾರಕ್ಕೆ ಬೇರೆ ಯಾವುದೇ ಪಕ್ಷದ ಬೆಂಬಲದ ಅಗತ್ಯವಿಲ್ಲ. ಮುಂದಿನ ಮೂರೂವರೆ ವರ್ಷ ಸ್ವಂತ ಬಲದಿಂದಲೇ ಸರ್ಕಾರ ನಡೆಸಿ, ಉತ್ತಮ ಆಡಳಿತ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಮೂರೂವರೆ ವರ್ಷಗಳ ಕಾಲ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸಬೇಕು ಎಂದು ರಾಜ್ಯದ ಜನ ಸಂಕಲ್ಪ ಮಾಡಿದ್ದಾರೆ. ಉಪ ಚುನಾವಣೆಯಲ್ಲಿ ೧೫ ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ. ನಮಗೆ ಯಾವುದೇ ಪಕ್ಷದ ಬೆಂಬಲದ ಅಗತ್ಯವಿಲ್ಲ ಎಂದು ಆತ್ಮ ವಿಶ್ವಾಸದಿಂದ ನುಡಿದರು.
ಉಪ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಸಮೀಕರಣ ಬದಲಾಗಲಿದೆ ಎಂಬ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ಕೊಡುವುದಲ್ಲ. ಅವರು ಏನು ಬೇಕಾದರೂ ಹೇಳಿಕೊಳ್ಳಲಿ ಎಂದರು.
ಬಳ್ಳಾರಿಯ ಹೊಸಪೇಟೆಯಲ್ಲಿ ಪ್ರತ್ಯೇಕವಾಗಿ ಮಾತನಾಡಿದ ಯಡಿಯೂರಪ್ಪ, ಉಪ ಚುನಾವಣೆ ನಡೆಯುತ್ತಿರುವ ಎಲ್ಲಾ ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಹೀಗಾಗಿ ನಮಗೆ ಜೆಡಿಎಸ್ ಅಷ್ಟೇ ಅಲ್ಲ ಯಾವುದೇ ಪಕ್ಷದ ಬೆಂಬಲ ಬೇಕಿಲ್ಲ ಎಂದರು.
ಈಗ ರಾಜ್ಯದಲ್ಲಿ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿಲ್ಲ. ಅದು ಮೂರುವರೆ ವರ್ಷದ ಬಳಿಕ ಬರುತ್ತದೆ. ಆಗಲೂ ಬಿಜೆಪಿ 150 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಈ ಮೂಲಕ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲಾಗುವುಗು ಎಂದರು.
ಬಳಿಕ ಮಯೂರ ಭುವನೇಶ್ವರಿ ಹೊಟೇಲ್ ಮೈದಾನದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಭಾಷಣ ಮಾಡಿದ ಸಿಎಂ, ಈ ಚುನಾವಣೆಯಲ್ಲಿ ಆನಂದ್ ಸಿಂಗ್ ಅವರನ್ನು ಅತಿ ಹೆಚ್ಚು ಮತಗಳಿಂದ ಆಯ್ಕೆ ಮಾಡಿ. ಅವರು ಕ್ಷೇತ್ರದ ಅಭಿವೃದ್ದಿಗೆ ಕೇಳಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ನಾನು ಬದ್ಧ ಎಂದು ಹೇಳಿದರು.
Advertisement