ಬೆಂಗಳೂರು: ಕೆಪಿಸಿಸಿ ಸಾರಥ್ಯ ಹಾಗೂ ಪ್ರತಿಪಕ್ಷ ನಾಯಕತ್ವಕ್ಕಾಗಿ ಪಕ್ಷದೊಳಗೆ ಪೈಪೋಟಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗೊಂದಲ ನಿವಾರಿಸಲು ಮುಂದಾಗಿರುವ ಹೈಕಮಾಂಡ್, ಪಕ್ಷದ ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂಧನ್ ಮಿಸ್ತ್ರಿ ಇಂದು ನಗರದ ಖಾಸಗಿ ಹೋಟೆಲ್ ನಲ್ಲಿ ರಾಜ್ಯದ 60 ನಾಯಕರ ಅಭಿಪ್ರಾಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಿದ್ದು, ಬಹುತೇಕ ನಾಯಕರು ಜಾತಿ, ಪ್ರಾದೇಶಿಕ ಪ್ರಾತಿನಿಧ್ಯದ ಜೊತೆಗೆ ಸಾಮೂಹಿಕ ನಾಯಕತ್ವದಲ್ಲಿ ಪಕ್ಷ ಮುನ್ನಡೆಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಮುಖವಾಗಿ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಮೂಲ ಹಾಗೂ ವಲಸೆ ಕಾಂಗ್ರೆಸ್ಸಿಗರ ನಡುವೆ ಪೈಪೋಟಿ ನಡೆಯುತ್ತಿರುವುದರಿಂದ ಪ್ರತಿಪಕ್ಷದ ನಾಯಕ ಹಾಗೂ ಶಾಸಕಾಂಗ ಪಕ್ಷದ ನಾಯಕ ಎರಡೂ ಸ್ಥಾನಗಳನ್ನು ಒಬ್ಬರಿಗೆ ನೀಡಬಾರದು ಎನ್ನುವ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಕಾಂಗ್ರೆಸ್ ಹೈ ಕಮಾಂಡ್ ಮೂರು ಸ್ಥಾನಗಳಿಗೂ ಪ್ರತಿಯೊಬ್ಬರಿಂದ ಕನಿಷ್ಠ ಮೂರು ಹೆಸರುಗಳನ್ನು ಸೂಚಿಸಲು ಅವಕಾಶ ಕಲ್ಪಿಸಿತ್ತು.
ಸಿದ್ದರಾಮಯ್ಯಗೆ ವಿರೋಧ ಪಕ್ಷದ ನಾಯಕ ಸ್ಥಾನ ನೀಡದಂತೆ ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದಿದ್ದ ನಾಯಕರಿಂದ ವಿರೋಧ ವ್ಯಕ್ತವಾಗಿದೆ. ಬಿ. ಕೆ. ಹರಿಪ್ರಸಾದ್ , ಕೆ. ಎಚ್ ಮುನಿಯಪ್ಪ ವಿರೋಧ ವ್ಯಕ್ತಪಡಿಸಿದ್ದು, ಇಬ್ಬರಿಬ್ಬರು ಒಟ್ಟಿಗೆ ತೆರೆಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಆದಾಗ್ಯೂ, ಬಹುತೇಕ ಶಾಸಕರು ಸಿದ್ದರಾಮಯ್ಯ ಪರ ಒಲವು ವ್ಯಕ್ತಪಡಿಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
Advertisement