ಗದಗ: ಬಿಜೆಪಿಯ ಆಪರೇಷನ್ ಕಮಲ ಕಾರ್ಯಾಚರಣೆಗೆ ಬಲಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ 15
ಅನರ್ಹ ಶಾಸಕರ ಕ್ಷೇತ್ರಗಳಿಗೆ ನಡೆಯುವ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಎಲ್ಲ ಸಿದ್ಧತೆ ಮಾಡಿಕೊಂಡಿದ್ದು, ಸೂಕ್ತ ರಣತಂತ್ರ ರೂಪಿಸುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಶಾಸಕರ ಅನರ್ಹತೆ ಕುರಿತು ಸರ್ವೋಚ್ಚ ನ್ಯಾಯಾಲಯದ ತೀರ್ಪು ಹೊರಬಿದ್ದ ಕೂಡಲೇ ಅಭ್ಯರ್ಥಿಗಳನ್ನು ಘೋಷಿಸಲಾಗುವುದು. ಸ್ಥಳೀಯ ನಾಯಕರನ್ನೊಳಗೊಂಡಂತೆ ಎಲ್ಲರ ಸಹಕಾರದಿಂದ ಚುನಾವಣೆ ಎದುರಿಸುತ್ತೇವೆ ಎಂದರು.
ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನ ರದ್ದತಿಯಂತಹ ಭಾವನಾತ್ಮಕ ಅಂಶಗಳು ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ವಿಧಾನಸಭಾಧ್ಯಕ್ಷರ ವಿರುದ್ಧ ತಾವು ಏಕವಚನ ಬಳಕೆ ಮಾಡಿರುವ ಬಗ್ಗೆ ಹಕ್ಕು ಚ್ಯುತಿ ಮಂಡಿಸುವ ಕುರುತು ಕೇಳಲಾದ ಪ್ರಶ್ನೆಗೆ, ಈ ವಿಚಾರದಲ್ಲಿ ಹಕ್ಕುಚ್ಯುತಿ ಮಂಡನೆಯ ಪ್ರಶ್ನೆಯೇ ಬರುವುದಿಲ್ಲ ಎಂದು ಪ್ರತಿಕ್ರಿಯಿಸಿದರು.
ಈ ಹಿಂದೆ ಬಳ್ಳಾರಿಗೆ ಮಾಡಿದ್ದ ಪಾದಯಾತ್ರೆ ರೀತಿಯಲ್ಲಿ ಮತ್ತೊಮ್ಮೆ ಪಾದಯಾತ್ರೆ ಕೈಗೊಳ್ಳುವ ಕುರಿತು ಚಿಂತನೆ ನಡೆಸಿದ್ದು, ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದರು.
Advertisement