ಬೆಂಗಳೂರು: ಡಿಕೆ ಶಿವಕುಮಾರ್ ಬಂಧನ ವಿರೋಧಿಸಿ ಕಾಂಗ್ರೆಸ್ ಬುಧವಾರ ಕರೆ ನೀಡಿರುವ ಪ್ರತಿಭಟನೆಯಲ್ಲಿ ಜೆಡಿಎಸ್ ಕೂಡಾ ಪಾಲ್ಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಡಿಕೆ ಶಿವಕುಮಾರ್ ಅವರನ್ನು ಬಂಧಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ ಇಡಿ ವಿಚಾರಣೆಗೆ ಸಹಕರಿಸಿದ್ದರೂ ಡಿಕೆ ಶಿವಕುಮಾರ್ ಅವರನ್ನು ಬಂಧಿಸಿರುವುದು ಖಂಡನೀಯ ಎಂದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಡಿ, ಆದಾಯ ತೆರಿಗೆ ಇಲಾಖೆ ಮತ್ತಿತರ ಕೇಂದ್ರಿಯ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ವಿರೋಧ ಪಕ್ಷಗಳನ್ನು ಹಣಿಯುವಲ್ಲಿ ನಿರತವಾಗಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೂಲೆಯಾಗುತ್ತಿದೆ ಎಂದು ಟೀಕಿಸಿದರು.
ಗುಜರಾತಿನ ಕಾಂಗ್ರೆಸ್ ಶಾಸಕರಿಗೆ ರಕ್ಷಣೆ ನೀಡಿದ್ದರಿಂದ ಡಿಕೆ ಶಿವಕುಮಾರ್ ಅವರಿಗೆ ಇಂತಹ ಸ್ಥಿತಿ ಬಂದಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರೇ ಹೇಳಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರದಿಂದ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ , ಡಿಕೆಶಿವಕುಮಾರ್ ಬಂಧನ ವಿರೋಧಿಸಿ ನಡೆಯಲಿರುವ ಹೋರಾಟದಲ್ಲಿ ಜೆಡಿಎಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದರು.
Advertisement