ಬಿಜೆಪಿಯಿಂದಲೇ ರಾಜ್ಯದಲ್ಲಿ ಮಧ್ಯಂತರ ಚುನಾವಣೆ -ಎಚ್ ಡಿ ಕುಮಾರಸ್ವಾಮಿ ಭವಿಷ್ಯ
ಬೆಂಗಳೂರು:ಕೇಂದ್ರದ ಬಿಜೆಪಿ ಹೈಕಮಾಂಡ್ ನಿರ್ಧಾರದಿಂದಲೇ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗಬಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿಂದು ಜೆಡಿಎಸ್ ಚಿಂತನ- ಮಂಥನ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಇದ್ದಂತೆ ಕಾಣುತ್ತಿಲ್ಲ, ಮುಖ್ಯಮಂತ್ರಿಗಳಿಗೆ ಅಧಿಕಾರ ನಡೆಸುವುದಕ್ಕೆ ಸ್ವಾತಂತ್ರ್ಯ ಇಲ್ಲ, ಪಕ್ಷದಲ್ಲಿ ಮುಖ್ಯಮಂತ್ರಿ ಅವರ ಜೊತೆ ಯಾರು ಇಲ್ಲ. ಸ್ವಂತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಹೈ ಕಮಾಂಡ್ ಕಿತ್ತುಕೊಂಡಿದೆ ಎಂದು ಆರೋಪಿಸಿದರು.
ನಾವು ಯಾರೂ ಬಿಜೆಪಿ ಸರ್ಕಾರ ಪತನಗೊಳಿಸುವ ಪ್ರಯತ್ನ ಮಾಡಬೇಕಿಲ್ಲ. ಬಿಜೆಪಿ ನಾಯಕರ ನಿರ್ಧಾರಗಳಿಂದಲೇ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಪ್ರವಾಹದಿಂದಾಗಿ ಜನರು ಮನೆ, ಮಠ ಕಳೆದುಕೊಂಡು ಸಂತ್ರಸ್ತರ ಶಿಬಿರ ಸೇರಿದ್ದಾರೆ. ಆದರೆ, ಅವರಿಗೆ ವಸತಿ ಕಲ್ಪಿಸಬೇಕಾದ ಸಚಿವರು ಮಾತ್ರ ಅವರ ಬಗ್ಗೆ ಕಾಳಜಿ ಇಲ್ಲದಂತೆ ದಸರಾ ಸಂಭ್ರಮದಲ್ಲಿ ಮುಳುಗಿದ್ದಾರೆ ಎಂದು ವಸತಿ ಸಚಿವ ವಿ. ಸೋಮಣ್ಣ ವಿರುದ್ಧ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.