ಅನರ್ಹ ಶಾಸಕರ ಜೊತೆ ಮುಖ್ಯಮಂತ್ರಿ ರಹಸ್ಯ ಸಭೆ : ದೆಹಲಿಗೆ ಯಡಿಯೂರಪ್ಪ ದೌಡು

ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ ಅನರ್ಹ ಶಾಸಕರ ಜೊತೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಭೆ ನಡೆಸಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ ಅನರ್ಹ ಶಾಸಕರ ಜೊತೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಭೆ ನಡೆಸಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ನಗರದ ಅರಣ್ಯ ಇಲಾಖೆ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ,ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ,ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ,ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ಅನರ್ಹ ಶಾಸಕರು ಭಾಗಿಯಾಗಿದ್ದರು.

ಸಭೆಯಲ್ಲಿ ಉಪಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಅನರ್ಹ ಶಾಸಕರು ತಮ್ಮ ಭವಿಷ್ಯದ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್​ ತೀರ್ಪು ಬರುವವರೆಗೆ ನಾವು ಉಪಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.ಇದರಿಂದಾಗಿ ನಮ್ಮ ರಾಜಕೀಯ ಭವಿಷ್ಯವೇ ಹಾಳಾಗಿ ಹೋಗಿದೆ. ನಿಮ್ಮನ್ನು ನಂಬಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆ.ಆದರೆ ತಮ್ಮ ಕಾನೂನು ಹೋರಾಟ ಸೇರಿದಂತೆ ಯಾವುದೇ ವಿಚಾರಗಳಲ್ಲಿ ಸರ್ಕಾರ ಸರಿಯಾಗಿ ಸಹಕಾರ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಅವರನ್ನು ಹಿಗ್ಗಾ ಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಇನ್ನು ಸಿಎಂ ಯಡಿಯೂರಪ್ಪ ಅವರು ದಿಢೀರ್ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ದೆಹಲಿಗೆ ದೌಡಾಯಿಸಿದ್ದು ಅನರ್ಹ ಶಾಸಕರು ಮತ್ತು ಉಪ‌ಚುನಾವಣೆ ತಂತ್ರದ ಕುರಿತು ಹೈಕಮಾಂಡ್ ಜತೆ ಚರ್ಚಿಸಲಿದ್ದಾರೆ. ಇನ್ನು ಅನರ್ಹ ಶಾಸಕರು ಸಹ ಯಡಿಯೂರಪ್ಪ ಅವರೊಡನೆ ದೆಹಲಿಗೆ ತೆರಳಿದ್ದು ಶಾಸಕರ ರಾಜಕೀಯ ಭವಿಷ್ಯ ಸಂಬಂಧ ಚರ್ಚೆ ನಡೆಯಲಿದೆ. ಇದರೊಡನೆ ಸೋಮವಾರ ಅನರ್ಹ ಶಾಸಕರ ಅರ್ಜಿ ಸುಪೆಈಂ ಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದ್ದು ಶಾಸಕರ ಪರ ವಕೀಲ ಮುಕುಲ್​ ರೋಹ್ಟಗಿ ಅವರೊಡನೆ ಅನರ್ಹರು ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com