'ಜನರು ಸಮೂಹ ಸನ್ನಿಗೆ ಸಿಲುಕಿದ್ದಾರೆ, ಸೀಲ್ಡೌನ್ ಕುರಿತು ಸ್ಪಷ್ಟತೆ ಕೊಡಿ: ಕುಮಾರಸ್ವಾಮಿ

ಕೊರೋನಾ ವೈರಸ್ ಹೊಡೆತದಿಂದಾಗಿ ಇಡೀ ಜಗತ್ತು ಸಂಕಷ್ಟಕ್ಕೆ ಸಿಲುಕಿದೆ. ನಿಖರ ಚಿಕಿತ್ಸೆ ಇಲ್ಲದ ಕಾರಣ ಕೊವಿಡ್- 19 ರೋಗ ಹರಡದಂತೆ ತಡೆಯಲು ಲಾಕ್ ಡೌನ್ ಜಾರಿಗೆ ತರಲಾಗಿದ್ದು, ದೇಶ ಸ್ತಬ್ಧವಾಗಿದೆ.
ಕುಮಾರಸ್ವಾಮಿ
ಕುಮಾರಸ್ವಾಮಿ
Updated on

ಬೆಂಗಳೂರು: ಕೊರೋನಾ ವೈರಸ್ ಹೊಡೆತದಿಂದಾಗಿ ಇಡೀ ಜಗತ್ತು ಸಂಕಷ್ಟಕ್ಕೆ ಸಿಲುಕಿದೆ. ನಿಖರ ಚಿಕಿತ್ಸೆ ಇಲ್ಲದ ಕಾರಣ ಕೊವಿಡ್- 19 ರೋಗ ಹರಡದಂತೆ ತಡೆಯಲು ಲಾಕ್ ಡೌನ್ ಜಾರಿಗೆ ತರಲಾಗಿದ್ದು, ದೇಶ ಸ್ತಬ್ಧವಾಗಿದೆ. ಜನ ಮುಂದೆನಾಗುತ್ತದೆಯೊ ಎಂಬ ಆತಂಕದಲ್ಲಿದ್ದು, ಇಂತಹ ಸಂದರ್ಭದಲ್ಲಿ ಜನರಿಗೆ ಸ್ಪಷ್ಟ ಮಾಹಿತಿ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಒತ್ತಾಯಿಸಿದ್ದಾರೆ.

ದೇಶಾದ್ಯಂತ ಈಗಾಗಲೇ 7,447 ಜನರಲ್ಲಿ ಸೋಂಕು ದೃಢಪಟ್ಟಿದೆ, 239 ಜನರು ಕೊರೋನಾ ರೋಗಕ್ಕೆ ಬಲಿಯಾಗಿದ್ದಾರೆ. ಜೊತೆಗೆ ಸಮಾಧನಕರ ಸಂಗತಿ ಎಂದರೆ 643 ಸೋಂಕಿತರು ಗುಣಮುಖರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಜತೆಗೆ ಸೀಲ್ ಡೌನ್ ಜಾರಿಗೆ ತರಲು ಸರ್ಕಾರ ಮುಂದಾಗಿರುವುದು ಜನರಲ್ಲಿ ಹೊಸ ಆತಂಕ ಸೃಷ್ಟಿಸಿದೆ ಎಂದು ಹೇಳಿದ್ದಾರೆ.

ಸೀಲ್ ಡೌನ್ ಗೆ ಸಂಬಂಧಿಸಿದಂತೆ ಬಗೆಬಗೆಯ ಸುದ್ದಿಗಳು ಹರಿದಾಡುತ್ತಿವೆ. ಜನರಲ್ಲಿ ಭೀತಿ ಆವರಿಸಿದ್ದು, ಸಮೂಹ ಸನ್ನಿಗೆ ಸಿಲುಕಿದ್ದಾರೆ. ಆಹಾರ, ಔಷಧ, ಅಗತ್ಯ ವಸ್ತುಗಳ ಲಭ್ಯತೆ ಬಗ್ಗೆ ಜನರಲ್ಲಿ ಅನುಮಾನಗಳು ಮೂಡಿದ್ದು, ಅವುಗಳ ದಾಸ್ತಾನಿಗೆ ಮುಂದಾಗಿದ್ದಾರೆ. ಇದು ಮತ್ತೊಂದು ಸಮಸ್ಯೆ ಸೃಷ್ಟಿಸುವ ಮುನ್ನ ಸರ್ಕಾರ ಅನುಮಾನಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಸೀಲ್ ಡೌನ್ ಭೀತಿ ಜನರನ್ನು ಸಮೂಹ ಸನ್ನಿಗೆ ದೂಡಿರುವಾಗಲೇ, ದಿನಸಿ ಅಂಗಡಿ, ಔಷಧಾಲಯಗಳು ತೆರೆಯಬೇಕೋ ಬೇಡವೋ ಎಂಬ ಅನುಮಾನ ಮಾರಾಟಗಾರರಲ್ಲಿ ಮೂಡಿದೆ. ಹಾಗೇನಾದರೂ ದಿನಸಿ ಅಂಗಡಿಗಳು, ಔಷಧಾಲಯಗಳು ಭೀತಿಯಿಂದ ಮುಚ್ಚಿದರೆ, ಜನರಿಗೆ ಆಹಾರ, ಔಷಧಗಳ ಲಭ್ಯತೆಯಲ್ಲಿ ಸಮಸ್ಯೆ ಸೃಷ್ಟಿಯಾಗಲಿದೆ. ಈ ಬಗ್ಗೆ ಸರ್ಕಾರ ಎಚ್ಚರ ವಹಿಸುವ ತುರ್ತು ಎದುರಾಗಿದೆ. ಈ ಬಗ್ಗೆ ಸರ್ಕಾರ ಗಮನ ಹರಿಸಲಿ ಎಂದು ಎಚ್ಡಿಕೆ ಎಚ್ಚರಿಕೆ ಕೊಟ್ಟಿದ್ದಾರೆ.

ಸರ್ಕಾರ ಸೀಲ್ ಡೌನ್ ಜಾರಿ ಮಾಡಲು ನಿರ್ಧರಿಸಿದೆಯಾ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಹಾಗೇನಾದರೂ ಸರ್ಕಾರ ನಿರ್ಧಾರ ಮಾಡಿದ್ದರೆ ಅದನ್ನು ಜನರಿಗೆ ನೇರವಾಗಿ ತಿಳಿಸಬೇಕು. ಯಾವ್ಯಾವ ಜಿಲ್ಲೆಗಳಿಗೆ ಇದು ಅನ್ವಯ? ಸೀಲ್ ಡೌನ್ ಅವಧಿಯಲ್ಲಿ ಏನೆಲ್ಲ ಲಭ್ಯ, ಏನು ಲಭ್ಯವಿರದು ಎಂಬ ಬಗ್ಗೆ ಸರ್ಕಾರ ಕೂಡಲೇ ಅಧಿಕೃತವಾಗಿ ಮಾಹಿತಿ ನೀಡಬೇಕು. ಇಲ್ಲವಾದಲ್ಲಿ ಗಾಳಿ ಸುದ್ದಿಗಳು, ಸುಳ್ಳು ಮಾಹಿತಿಗಳು ಜನರ ದಿಕ್ಕು ತಪ್ಪಿಸಲಿವೆ. ಇದರಿಂದ ಮತ್ತೊಂದು ಸಮಸ್ಯೆ ಎದುರಾಗಲಿದೆ ಎಂದಿದ್ದಾರೆ.

ಸೂಕ್ತ ತಿಳಿವಳಿಕೆ ಕೊಡದೇ ಸೀಲ್ಡೌನ್ ಮಾಡುವುದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ. ಸೀಲ್ಡೌನ್ ಕುರಿತು ಸರ್ಕಾರ ಸೂಕ್ತ ತಿಳಿವಳಿಕೆ ಕೊಡಬೇಕಾದ ಅನಿವಾರ್ಯತೆಯಿದೆ. ಏಕಾಏಕಿ ಲಾಕ್ಡೌನ್ ಜಾರಿ ಮಾಡಿದ್ದರಿಂದ ಲಕ್ಷಾಂತರ ಕೂಲಿ ಕಾರ್ಮಿಕರು ಇನ್ನು ಜಿಲ್ಲೆಗಳ ಗಡಿಯಲ್ಲಿ ಅತಂತ್ರ ಸಂಕಷ್ಟದ ಜೀವನ ಸಾಗಿಸುತ್ತಿದ್ದಾರೆ. ಈಗ ಏಕಾಏಕಿ ಯಾವುದೇ ಮಾಹಿತಿ ಕೊಡದೇ ಸೀಲ್ಡೌನ್ ಜಾರಿ ಮಾಡಿದರೆ ಮತ್ತೊಂದು ರೀತಿಯಲ್ಲಿ ಜನರು ಸಂಕಷ್ಟಕ್ಕೆ ಸಿಲುಕುತ್ತಾರೆ. ಸೋಂಕು ಹರಡದಂತೆ ತಡೆಯಲು ಏಕಾಏಕಿ ನಿರ್ಧಾರಗಳು ತಕ್ಷಣಕ್ಕೆ ಪರಿಹಾರ ಕೊಟ್ಟರೂ ಭವಿಷ್ಯದಲ್ಲಿ ಬೇರೆ ರೀತಿಯ ಸಂಕಷ್ಟಗಳಿಗೆ ಕಾರಣವಾಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com