ಬಿಜೆಪಿ ಕಚೇರಿಯಲ್ಲಿ ಗೋಪೂಜೆ: ಇದೊಂದು ಐತಿಹಾಸಿಕ ನಿರ್ಣಯ ಎಂದ ಎಸ್.ಟಿ.ಸೋಮಶೇಖರ್
ಬೆಂಗಳೂರು: ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣೆ ವಿಧೇಯಕ 2020ಕ್ಕೆ ಬುಧವಾರ
ವಿಧಾನಸಭೆಯಲ್ಲಿ ಅಂಗೀಕಾರ ದೊರೆತ ಹಿನ್ನೆಲೆಯಲ್ಲಿ ಇಂದು ಮಲ್ಲೇಶ್ವರದಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ
ಗೋ ಪೂಜೆಯನ್ನು ನೆರವೇರಿಸಲಾಯಿತು.
ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಗೋ ಪೂಜೆ ಮಾಡುವ ಮೂಲಕ ವಿಧೇಯಕವನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಆಯಾ ಜಿಲ್ಲೆಗಳ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಪಕ್ಷದ ಕಚೇರಿಗಳಲ್ಲಿ ಗೋಪೂಜೆಗಳನ್ನು ಇಂದು ರಾಜ್ಯಾದ್ಯಂತ ನೆರವೇರಿಸುತ್ತಿದ್ದಾರೆ. ಇದೊಂದು ಐತಿಹಾಸಿಕ ನಿರ್ಣಯವಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಈ ವಿಧೇಯಕಕ್ಕೆ ಕಾಂಗ್ರೆಸ್ ಪಕ್ಷದವರ ವಿರೋಧ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾಂಗ್ರೆಸ್ ನವರದ್ದು ವಿರೋಧ ಮಾಡುವುದೇ ಕೆಲಸ. ಅವರು ವಿರೋಧ ಪಕ್ಷವಾಗಿರುವುದರಿಂದ ಪ್ರತಿ ಒಳ್ಳೆಯ ಕೆಲಸಕ್ಕೂ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಹೇಳಿದರು.

