ಬೆಂಗಳೂರು: ಸಚಿವ ಆನಂದ್ ಸಿಂಗ್ ಅವರ ಖಾತೆಯನ್ನು ಬದಲಾಯಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಈ ಬಗ್ಗೆ ನಾಳೆ ವಿಧಾನಮಂಡಲ ಅಧಿವೇಶನ ಉದ್ದೇಶಿಸಿ ಮಾತನಾಡಲಿರುವ ರಾಜ್ಯಪಾಲರ ಭಾಷಣ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಎಚ್ಚರಿಕೆ ನೀಡಿದೆ.
ಮುಖ್ಯಮಂತ್ರಿಗಳು ಕಾನೂನನ್ನು ಪಾಲಿಸಿ ಆನಂದ್ ಸಿಂಗ್ ಅವರನ್ನು ಅರಣ್ಯ ಖಾತೆ ಸಚಿವ ಹುದ್ದೆಯಿಂದ ಬದಲಾಯಿಸಬೇಕು. ಆನಂದ್ ಸಿಂಗ್ ಅವರು ಅದೇ ಖಾತೆಯಲ್ಲಿ ಮುಂದುವರಿದರೆ ಕಾಂಗ್ರೆಸ್ ಈ ವಿಚಾರವನ್ನು ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪ ಮಾಡಲಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ.
15ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿರುವ ಆನಂದ್ ಸಿಂಗ್ ಅವರನ್ನು ಅರಣ್ಯ ಖಾತೆಯಿಂದ ಬದಲಾಯಿಸಬೇಕೆಂದು ವಿರೋಧ ಪಕ್ಷದ ನಾಯಕರು ಸೇರಿದಂತೆ ಸಮಾಜದ ವಿವಿಧ ವರ್ಗಗಳಿಂದ ಸಿಎಂ ಮೇಲೆ ಒತ್ತಡ ಹೆಚ್ಚಾಗುತ್ತಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಸಚಿವ ಆನಂದ್ ಸಿಂಗ್, ನನ್ನ ವಿರುದ್ಧ ಅರಣ್ಯ ಕಾಯ್ದೆಯಡಿ ಯಾವುದೇ ಕೇಸುಗಳು ನಿಖರವಾಗಿ ದಾಖಲಾಗಿಲ್ಲ ಮತ್ತು ಮುಖ್ಯಮಂತ್ರಿಗಳು ಬಯಸಿದರೆ ಖಾತೆ ಬದಲಾವಣೆಗೆ ನಾನು ಸಿದ್ದನಿದ್ದೇನೆ ಎಂದಿದ್ದಾರೆ.
Advertisement