ಬೆಂಗಳೂರು:ಬಿಜೆಪಿಯಿಂದ ಟಿಕೆಟ್ ಸಿಕ್ಕಿ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಮಾಜಿ ಸಚಿವ ಆರ್ ಶಂಕರ್ ಮತ್ತೊಮ್ಮೆ ಸಚಿವರಾಗುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆಯೇ?
ರಾಣೆಬೆನ್ನೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸ್ಪೀಕರ್ ಕೆ ಬಿ ಕೋಳಿವಾಡ ಅವರನ್ನು ಸೋಲಿಸಿ ಕರ್ನಾಟಕ ಪ್ರಜಾ ಜನತಾ ಪಕ್ಷದಿಂದ ಏಕೈಕ ಶಾಸಕರಾಗಿ ಆಯ್ಕೆಯಾಗಿ ಬಂದಿದ್ದ ಆರ್ ಶಂಕರ್ ಕಳೆದೆರಡು ವರ್ಷಗಳಲ್ಲಿ ಈಗಾಗಲೇ 2 ಬಾರಿ ಸಚಿವರಾಗಿದ್ದಾರೆ.
2018ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ದತೆ ನಡೆಸುತ್ತಿದ್ದಾಗ ಶಂಕರ್ ಅವರ ನಿವಾಸದಲ್ಲಿದ್ದು ಯಡಿಯೂರಪ್ಪನವರಿಗೆ ಬೆಂಬಲ ನೀಡಲಿದ್ದರು. ಆದರೆ ಅಂದು ನಡೆದ ದಿಢೀರ್ ರಾಜಕೀಯ ಬದಲಾವಣೆ ನಂತರ ಅಂದೇ ಸಾಯಂಕಾಲ ಕೆಪಿಸಿಸಿ ಕಚೇರಿಗೆ ಹೋಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದರು.
ಹಿಂದಿನ ಉಪ ಚುನಾವಣೆಗಳಲ್ಲಿ ರಾಣೆಬೆನ್ನೂರು ಕ್ಷೇತ್ರದಿಂದ ಅರುಣ್ ಕುಮಾರ್ ಪೂಜಾರ್ ಅವರಿಗೆ ಟಿಕೆಟ್ ನೀಡಿದ್ದ ಬಿಜೆಪಿ ಶಂಕರ್ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ಸ್ಥಾನ ಕೊಡಿಸಿ ಸಚಿವರಾಗಿ ಮಾಡುವ ಬಗ್ಗೆ ಯಡಿಯೂರಪ್ಪನವರು ಆಶ್ವಾಸನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
Advertisement