ಬೆಂಗಳೂರು: ಪ್ರವಾಹದಿಂದಾಗಿ ತತ್ತರಿಸಿರುವ ಜಿಲ್ಲೆಗಳಲ್ಲಿ ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವೈಮಾನಿಕ ಸಮೀಕ್ಷೆ ನಡೆಸಿದ್ದು, ಇದೀಗ ಕಾಂಗ್ರೆಸ್ ನಾಯಕರೂ ಕೂಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಶೀಘ್ರದಲ್ಲೇ ಭೇಟಿ ನೀಡಲಿದ್ದಾರೆ.
ಪ್ರವಾಹಕ್ಕೆ ತುತ್ತಾಗಿರುವ ಉತ್ತರ ಕರ್ನಾಟಕ ಸುತ್ತಮುತ್ತಲಿನ ಗ್ರಾಮಗಳಿಗೆ ಭೇಟಿ ನೀಡಲಿರುವ ಕಾಂಗ್ರೆಸ್ ನಾಯಕರು ಪ್ರವಾಹದಿಂದ ಎದುರಾಗಿರುವ ನಷ್ಟವನ್ನು ಲೆಕ್ಕಹಾಕಲಿದ್ದಾರೆ. ಅಲ್ಲದೆ, ಪ್ರವಾಹ ಪೀಡಿತ ಜನರ ನೆರವಿಗೆ ಕೈಗೊಳ್ಳಲಾಗಿರುವ ಕಾರ್ಯಗಳ ಕುರಿತಂತೆಯೂ ಮಾಹಿತಿ ಪಡೆಯಲಿದ್ದಾರೆ.
ಪ್ರವಾಹ ಪೀಡಿತ ಜಿಲ್ಲೆಗಳಾಗಿರುವ ಬೀದರ್, ಕಲಬುರಗಿ, ಯಾದಗಿರಿ ಸೇರಿದಂತೆ ಇತರೆ ಕ್ಷೇತ್ರಗಳಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಕಾರಿ ಅಧ್ಯಕ್ಷ ಈಶ್ವರ್ ಖಂಡ್ರೆ ಸೇರಿದೆತ ಇತರೆ ಹಿರಿಯ ನಾಯಕರು ಭಾನುವಾರ ಮತ್ತು ಸೋಮವಾರ ಭೇಟಿ ನೀಡಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
ಭೇಟಿ ವೇಳೆ ಸ್ಥಳೀಯ ಜನರೊಂದಿಗೆ ಮಾತುಕತೆ ನಡೆಸಲಿರುವ ನಾಯಕರು, ತಾವು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ಮಾಹಿತಿ ಪಡೆಯಲಿದ್ದಾರೆ.
ಇನ್ನು ಈಗಾಗಲೇ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸೇನೆ ಹಾಗೂ ಎನ್'ಡಿಆರ್'ಎಫ್ ಪಡೆಗಳು ರಕ್ಷಣಾ ಕಾರ್ಯಾಜರಣೆಯನ್ನು ನಡೆಸಿದ್ದು, ಭೀಮಾನ ನದಿಯ ನೀರು ಸಾಮಾನ್ಯ ಸ್ಥಿತಿಗೆ ತಲುಪುತ್ತಿರುವ ಹಿನ್ನೆಲೆಯಲ್ಲಿ ಜನರು ತಮ್ಮ ತಮ್ಮ ಮನೆಗಳಿಗೆ ನಿಧಾನಗತಿಯಲ್ಲಿ ಹಿಂದಿರುಗುತ್ತಿದ್ದಾರೆಂದು ವರದಿಗಳು ತಿಳಿಸಿದವೆ.
Advertisement