ಬಿಜೆಪಿ ಜೊತೆಗೆ ಅಂತರಂಗ -ಬಹಿರಂಗ ಸಖ್ಯ ಉಳ್ಳವರೇ ಡ್ರಗ್ಸ್ ದಂಧೆಯಲ್ಲಿ ಸಿಕ್ಕಿಬೀಳುತ್ತಿದ್ದಾರೆ: ಸಾರಾ ಮಹೇಶ್
ಬೆಂಗಳೂರು: ಡ್ರಗ್ಸ್ ಮಾಫಿಯಾ ಬಗ್ಗೆ ಮೊದಲು ಧ್ವನಿ ಎತ್ತಿದ್ದೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಈ ಜಾಲದಲ್ಲಿ ಸಿಕ್ಕಿ ಬೀಳುತ್ತಿರುವವರು ಬಿಜೆಪಿಯ ಜೊತೆಗೆ ಅಂತರಂಗ -ಬಹಿರಂಗ ಸಖ್ಯ ಉಳ್ಳವರೇ ಆಗಿರುವುದರಿಂದ ಕನಲಿ ಹೋಗಿರುವ ಕೃಷಿ ಸಚಿವ ಬಿ.ಸಿ. ಪಾಟೀಲರು ಬಾಲ ಸುಟ್ಟ ಬೆಕ್ಕಿನಂತೆ ಆಡುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಸಾ.ರಾ. ಮಹೇಶ್ ತಿರುಗೇಟು ನೀಡಿದ್ದಾರೆ.
ಕ್ರಿಕೆಟ್ ಬೆಟ್ಟಿಂಗ್, ಡ್ರಗ್ ಮಾಫಿಯಾ ಮಟ್ಟಹಾಕಲು ಕುಮಾರಸ್ವಾಮಿಯವರು ಮಂತ್ರಿಯಾಗಿದ್ದಾಗ ಬಿಸಿ ಮುಟ್ಟಿಸಿದ್ದರಿಂದಲೇ ದೇಶಾಂತರ ಓಡಿಹೋಗಿ ತಲೆಮರೆಸಿಕೊಂಡಿದ್ದವರು ಜಾಮೀನು ಪಡೆದು ಬಂದಿದ್ದು, ಇದಕ್ಕೆ ತೆರೆಮರೆಯಲ್ಲಿ ನಿಂತು ವ್ಯವಸ್ಥೆ ಮಾಡಿದವರು ಯಾರು ಎಂಬುದು ಗುಟ್ಟಾಗಿ ಉಳಿದಿಲ್ಲ ಎಂದು ಕಿಡಿಕಾರಿದ್ದಾರೆ.
ಅಧಿಕಾರದ ಆಸೆಗಾಗಿ ಬಣ್ಣ ವೇಷ ಬದಲಿಸುವ ಜಾಯಮಾನ ಕೃಷಿ ಸಚಿವರಿಗೆ ಕರಗತವಾಗಿದೆ. ಊಸರವಳ್ಳಿಯನ್ನು ನಾಚಿಸುವಂತೆ ನಾಲಗೆಯ ಬಣ್ಣವನ್ನೂ ಬದಲಿಸುವ ಇಂತಹ ಬೃಹಸ್ಪತಿಗಳು ಕುಮಾರಸ್ವಾಮಿ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಲಿ ಎಂದು ಎಚ್ಚರಿಸಿದ್ದಾರೆ.
ಹಿಂದೆ ಪೋಲೀಸ್ ಇಲಾಖೆಯಲ್ಲಿದ್ದ ಕೃಷಿ ಸಚಿವ ಪಾಟೀಲರಿಗೆ ಇಂತಹಾ ಮಾಫಿಯಾಗಳ ಬಗ್ಗೆ ಗೊತ್ತಿಲ್ಲವೆಂದರೆ ಅವರ ವ್ವೃತ್ತಿನಿಷ್ಟೆಯು ನಗೆಪಾತಲಿನದ್ದಾಗುತ್ತದೆ. ಅಲ್ಲದೆ ಎಂತಹಾ ಊಸರವಳ್ಳಿಗಳು ಪೋಲೀಸ್ ಇಲಾಖೆಯಲ್ಲಿದ್ದರೆಂದು ಮರುಕ ಆಗುತ್ತದೆ. ಖಾಕಿ ಬಿಟ್ಟು ಖಾದಿ ತೊಟ್ಟ ಪಾಟೀಲರು ನಿಜವಾದ ಊಸರವಳ್ಳಿ ಎಂದು ಸಾರಾ ಮಹೇಶ್ ಕುಟುಕಿದ್ದಾರೆ.
ರಾಜ್ಯದಲ್ಲಿ ಯೂರಿಯಾದ ಕೃತಕ ಅಭಾವ ಸೃಷ್ಟಿಯಾಗಿರುವುದನ್ನು ಒಪ್ಪಿಕೊಂಡಿರುವ ಸಚಿವರು ಇದುವರೆಗೆ ಎಷ್ಟು ಮಂದಿಯ ವಿರುದ್ಧ ಕ್ರ್ಮ ಜರುಗಿಸಿದ್ದಾರೆ ಎಂದೂ ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ