ಯಡಿಯೂರಪ್ಪ
ಯಡಿಯೂರಪ್ಪ

ಅಧಿವೇಶನ ಮುಗೀತು, ಸರ್ಕಾರಕ್ಕೀಗ ಶುರುವಾಯ್ತು ಸಂಪುಟ ವಿಸ್ತರಣೆಯ ತಲೆನೋವು!

ತೀವ್ರ ಗದ್ದಲ, ಆರೋಪ-ಪ್ರತ್ಯಾರೋಪ, ವಾದಗಳ ನಡುವೆ ಕೊನೆಕೂ ಪ್ರಸಕ್ತ ಸಾಲಿನ ಮುಂಗಾರು ಅಧಿವೇಶನ ಮುಗಿದಿದ್ದು, ವಿರೋಧ ಪಕ್ಷಗಳನ್ನು ಸಮರ್ಥವಾಗಿ ಎದುರಿಸಿದ ರಾಜ್ಯ ಸರ್ಕಾರಕ್ಕೀಗ ಸಂಪುಟ ವಿಸ್ತರಣೆಯ ಮತ್ತೊಂದು ತಲೆನೋವು ಶುರುವಾಗಿದೆ. 
Published on

ಬೆಂಗಳೂರು: ತೀವ್ರ ಗದ್ದಲ, ಆರೋಪ-ಪ್ರತ್ಯಾರೋಪ, ವಾದಗಳ ನಡುವೆ ಕೊನೆಕೂ ಪ್ರಸಕ್ತ ಸಾಲಿನ ಮುಂಗಾರು ಅಧಿವೇಶನ ಮುಗಿದಿದ್ದು, ವಿರೋಧ ಪಕ್ಷಗಳನ್ನು ಸಮರ್ಥವಾಗಿ ಎದುರಿಸಿದ ರಾಜ್ಯ ಸರ್ಕಾರಕ್ಕೀಗ ಸಂಪುಟ ವಿಸ್ತರಣೆಯ ಮತ್ತೊಂದು ತಲೆನೋವು ಶುರುವಾಗಿದೆ. 

ಅಧಿವೇಶನ ಪೂರ್ಣಗೊಳ್ಳುತ್ತಿದ್ದಂತೆಯೇ ಸಚಿವಾಕಾಂಕ್ಶಿಗಳು ಇದೀಗ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ಆರಂಭಿಸಿದ್ದಾರೆ. 

ಕೆಲವರು ಸಚಿವ ಸ್ಥಾನಕ್ಕಾಗಿ ಯಡಿಯೂರಪ್ಪ ಅವರ ವಿಶ್ವಾಸಗಳಿಸಿಕೊಳ್ಳಲು ಯತ್ನ ನಡೆಸುತ್ತಿದ್ದರೆ, ಮತ್ತೆ ಕೆಲವರು ಕೇಂದ್ರೀಯ ನಾಯಕರ ಮೇಲೆ ಒತ್ತಡ ಹೇರುವ ಕಾರ್ಯಗಳನ್ನು ಮಾಡುತ್ತಿದ್ದಾರೆ. ಇನ್ನೂ ಕೆಲವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಮಾತುಕೆತ ನಡೆಸಿ ಸಚಿವ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದಾರೆ. 

ಸಂಪುಟ ವಿಸ್ತರಣೆ ಮಾಡಲು ಸರ್ಕಾರ ಈಗಾಗಲೇ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಸಚಿವ ಸ್ಥಾನದಲ್ಲಿರುವ ಕೆಲ ನಾಯಕರನ್ನು ತಮ್ಮ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮನವಿ ಮಾಡಿಕೊಳ್ಳುವ ಕಾರ್ಯಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ. 

ಈ ನಡುವೆ ಹೇಳಿಕೆ ನೀಡಿರುವ ಪ್ರವಾಸೋದ್ಯಮ ಸಚಿವ ಸಿಟಿ ರವಿಯವರು, ಬಿಜೆಪಿಯಲ್ಲಿರುವ ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಎಂಬ ನಿಯಮದಂತೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ. ಪಕ್ಷ ಬಯಸಿದರೆ ರಾಜೀನಾಮೆ ನೀಡುತ್ತೇನೆ. ಪಕ್ಷ ಏನು ಬಯಸುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. 

ನನ್ನನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಾಡಿ ಎಂದು ಕೇಳಿರಲಿಲ್ಲ. ಅನಿರೀಕ್ಷಿತವಾಗಿ ನನ್ನ ಮೇಲೆ ನಂಬಿಕೆ ಇಟ್ಟು ವರಿಷ್ಠರು ಜವಾಬ್ದಾರಿ ಕೊಟ್ಟಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ ಎಂದು ತಿಳಿಸಿದ್ದಾರೆ. 

ಪಕ್ಷ ಯಾವಾಗ ಸೂಚಿಸುತ್ತದೆಯೋ ಮರುಗಳಿಗೆಯಲ್ಲಿಯೇ ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ. ನನಗೆ ಇಷ್ಟು ದೊಡ್ಡ ಮಟ್ಟದ ಹುದ್ದೆ ಸಿಕ್ಕಿರುವುದರಿಂದ ಜವಾಬ್ದಾರಿ ಹೆಚ್ಚಾಗಿದೆ. ಪಕ್ಷ ಸಂಘಟನೆ ನನ್ನ ಮೇಲಿರುವ ಮಹತ್ವದ ಜವಾಬ್ದಾಹರಿ. ಚುನಾವಣೆಗೆ ನಿಲ್ಲಬೇಕೆಂದು ವರಿಷ್ಠರು ಸೂಚಿಸಿದಾಗ ಮರು ಮಾತನಾಡದೆ ಸ್ಪರ್ಧಿಸಿದೆ. ಅದರಂತೆ ಗೆದ್ದು ಬಂದಿದ್ದೇನೆ. ಎಂದಿಗೂ ಕೂಡ ನಾನು ಸಚಿವನಾಗಬೇಕೆಂದು ಲಾಬಿ ಮಾಡಿರಲಿಲ್ಲ. 

ಆದರೂ ಪಕ್ಷ ನೀಡಿದ ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ಈಗಲೂ ಅಷ್ಟೇ ನನ್ನನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಾಡಿ ಎಂದು ಕೇಳಿರಲಿಲ್ಲ. ಅನಿರೀಕ್ಷಿತವಾಗಿ ನನ್ನ ಮೇಲೆ ನಂಬಿಕೆ ಇಟ್ಟು ವರಿಷ್ಠರು ಜವಾಬ್ದಾರಿ ಕೊಟ್ಟಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದು ನನ್ನ ಮುಂದಿನ ಗುರಿಯಾಗಿದೆ. ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿಯೇ ಮುಂದುವರೆಯುತ್ತೇನೆ. ಸಚಿವ ಸ್ತಾನ ನನಗೆ ಶಾಶ್ವತವಲ್ಲ. ಹುದ್ದೆಯೂ ಶಾಶ್ವತವಲ್ಲ. ಈಗಲೂ ನಾನು ಸಾಮಾನ್ಯ ಕಾರ್ಯಕರ್ತ ಎಂದು ಪುನರುಚ್ಚರಿಸಿದರು. 

ಈ ನಡುವೆ 11 ಮಂದಿ ಶಾಸಕರು ಹಾಗೂ 6 ಮಂದಿ ಎಂಎಲ್ಸಿಗಳು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರ ನಿವಾಸಕ್ಕೆ ಶನಿವಾರ ರಾತ್ರಿ ಭೇಟಿ ನೀಡಿದ್ದು, ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com