ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಮತ್ತೆ ಆಡಳಿತಾಧಿಕಾರಿ ನೇಮಕ ಮಾಡುವ ಸಾಧ್ಯತೆಯಿದೆ. ಸೆಪ್ಟಂಬರ್ ತಿಂಗಳಲ್ಲಿ ಬಿಬಿಎಂಪಿ ಸದಸ್ಯರ ಅವಧಿ ಅಂತ್ಯಗೊಳ್ಳಲಿದ್ದು, ಆದರೆ ಕೊರೋನಾ ಕಾರಣದಿಂದಾಗಿ ಇನ್ನೂ ಚುನಾವಣಾ ಪ್ರಕ್ರಿಯೆಗಳು ಆರಂಭವಾಗಿಲ್ಲ.
ಹಿಂದಿನ 2015 ರ ಚುನಾವಣೆಯಲ್ಲಿ ಏಪ್ರಿಲ್ ತಿಂಗಳಿನಲ್ಲೇ ಚುನಾವಣೆ ಘೋಷಣೆಯಾಗಿದ್ದು, ಆಗಸ್ಟ್ ನಲ್ಲಿ ನೋಟಿಫಿಕೇಶನ್ ಹೊರಡಿಸಲಾಗಿತ್ತು. ಆಗಸ್ಟ್ 25 ರಂದು ಫಲಿತಾಂಶ ಬಂದಿತ್ತು. ಸೆಪ್ಟಂಬರ್ ತಿಂಗಳಲ್ಲಿ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ನಡೆದಿತ್ತು. ಆದರೆ ಈ ವರ್ಷ, ಸಾಂಕ್ರಾಮಿಕ ರೋಗದಿಂದಾಗಿ, ಎಲ್ಲವೂ ಹಿಂದೆ ಉಳಿದಿದೆ.
ನಗರಾಭಿವೃದ್ಧಿ ಇಲಾಖೆ ಇದುವರೆಗೂ ವಾರ್ಡ್ಗಳ ಡಿಲಿಮಿಟೇಶನ್ ಅನ್ನು ಮಾತ್ರ ಪೂರ್ಣಗೊಳಿಸಿದೆ. ಪ್ರತಿ ವಾರ್ಡ್ಗೆ ಮೀಸಲಾತಿ ಪ್ರಕ್ರಿಯೆ ಇನ್ನೂ ಬಾಕಿ ಉಳಿದಿದೆ. ಈ ಪ್ರಕ್ರಿಯೆ ಐದು ವರ್ಷಗಳಿಗೊಮ್ಮೆ ನಡೆಯುತ್ತದೆ.
ವಾರ್ಡ್ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಹೊರಡಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಹೇಳಿದ್ದಾರೆ. ವಾರ್ಡ್ ಮೀಸಲಾತಿ ಸರ್ಕಾರ ಮುಗಿಸಿದರೇ ನಾವು ನಮ್ಮ ಕೆಲಸ ಆರಂಭಿಸಬಹುದು.
ನಾವು ವಾರ್ಡ್ ಮೀಸಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ನಿರ್ದೇಶನ ನೀಡಲು ಹೈಕೋರ್ಟ್ ಮೆಟ್ಟಿಲೇರಿದ್ದೇವೆ ಎಂದು ತಿಳಿಸಿದ್ದಾರೆ.
ಆದರೆ ಇದುವರೆಗೂ ಯಾವುದೇ ಮಾಹಿತಿ ಬಂದಿಲ್ಲ ಎಂದು ಸಹ ತಿಳಿಸಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ಗ್ರಾಮಪಂಚಾಯಿತಿ ಚುನಾವಣೆಯನ್ನು ಅನಿರ್ಧಿಷ್ಟಾವದಿ ಕಾಲ ಮುಂದೂಡಿದೆ, ಸದ್ಯ ಸರ್ಕಾರ ಚುನಾವಣೆ ಮಾಡುವ ಸ್ಥಿತಿಯಲ್ಲಿಲ್ಲ.
ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಿಸುವಂತೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಮೂಲಗಳು ತಿಳಿಸಿವೆ, ಚುನಾವಣಾ ಪ್ರಕ್ರಿಯೆ ಇನ್ನೂ ಪ್ರಾರಂಭವಾಗಿಲ್ಲ. ನಮಗೆ ಸಮಯ ಬೇಕು. ತಮ್ಮ ಅವಧಿಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸುವಂತೆ ಬಿಬಿಎಂಪಿ ಕೌನ್ಸಿಲರ್ಗಳಿಂದ ಮನವಿಗಳಿದ್ದರೂ, ಸರ್ಕಾರ ಇದನ್ನು ಒಪ್ಪುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ.
Advertisement