ತಮ್ಮದೇ ಪಕ್ಷದ ಶಾಸಕರ ಮನೆ ಮೇಲೆ ದಾಳಿ ನಡೆದರೂ ಖಂಡಿಸದ ಸಿದ್ದರಾಮಯ್ಯರಿಂದ ಬಿಜೆಪಿಗೆ ಅಸಂಬದ್ಧ ಪ್ರಶ್ನೆ: ಬಿ.ಎಲ್. ಸಂತೋಷ್
ಬೆಂಗಳೂರು: ತಮ್ಮದೇ ಪಕ್ಷದ ಶಾಸಕರ ಮನೆ ಮೇಲೆ ದಾಳಿ ನಡೆದರೂ ಖಂಡಿಸದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಪಕ್ಷಕ್ಕೆ ಅಸಂಬದ್ಧ ಪ್ರಶ್ನೆಗಳನ್ನು ಕೇಳುತ್ತಿದ್ದಾರೆಂದು ಬಿಜೆಪಿ ನಾಯಕ ಬಿ.ಎಲ್.ಸಂತೋಷ್ ಅವರು ಹೇಳಿದ್ದಾರೆ.
ಕರ್ನಾಟಕ ಮಾಜಿ ಮುಖ್ಯಮಂತ್ರಿಗಳು ನನಗೆ 13 ಟ್ವೀಟ್ ಮಾಡಿದ್ದಾರೆ. ತಮ್ಮ ಪಕ್ಷದ ದಲಿತ ಶಾಸಕರೊಬ್ಬರ ಮೇಲೆ ದಾಳಿ ನಡೆದಿದ್ದರೂ ಒಂದೂ ಟ್ವೀಟ್ ಮಾಡಿ ಖಂಡನೆ ವ್ಯಕ್ತಪಡಿಸಿಲ್ಲ. ಸರ್ಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿಲ್ಲ. ಆದರೆ, ಬಿಜೆಪಿ ಪಕ್ಷಕ್ಕೆ ಅಸಂಬದ್ಧ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಮತ ಕಳೆದುಕೊಳ್ಳುವ ಭೀತಿಯಿಂದ ಸಮಾಧಾನಕರ ನೀತಿ ಅನುಸರಿಸುತ್ತಿದ್ದಾರೆ. ದಲಿತರ ವಿರುದ್ಧ ಕಾಂಗ್ರೆಸ್ ಎಂದು ಬಿಎಲ್ ಸಂತೋಷ್ ಅವರು ಟ್ವೀಟ್ ಮಾಡಿದ್ದಾರೆ.
ಇಸ್ಲಾಂ ಧರ್ಮಗುರು ಮಹಮದ್ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕಾರಿ ಪೋಸ್ಟ್ ಮಾಡಲಾಗಿದೆ ಎಂದು ಮಂಗಳವಾರ ರಾತ್ರಿ ವ್ಯಾಪಕ ಹಿಂಸಾಚಾರ ನಡೆದಿತ್ತು. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದರು.
ಪುಲಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ನಿವಾಸ, ಸುತ್ತಮುತ್ತಲಿನ ಮನೆಗಳು ಹಾಗೂ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಕೋಮಿಗೆ ಸೇರಿದ ಉದ್ರಿಕ್ತ ಗುಂಪು ದಾಂಧಲೆ ನಡೆಸಿ, ಸಿಕ್ಕಸಿಕ್ಕ ವಾಹನಗಳು, ಮನೆ-ಮಳಿಗೆಗಳಿಗೆ ಬೆಂಕಿ ಹಚ್ಚಿದ್ದರು. ಶಾಸಕರ ನಿವಾಹ ಹಾಗೂ ಪಕ್ಕದ ಮನೆ ಭಸ್ಮವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಈ ವೇಳೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಘಟನೆ ವೇಳೆ ನೂರಾರು ಸಂಖ್ಯೆಯಲ್ಲಿದ್ದ ಉದ್ರಿಕ್ತರ ಗುಂಪು ಮಾರಾಕಾಸ್ತ್ರಗಳನ್ನು ಹಿಡಿದು ಹಿಂಸಾಚಾರ ನಡೆಸಿದ್ದರು, ಅಲ್ಲದೆ, ಪಟಾಕಿಗಳನ್ನು ಸಿಡಿಸಿ ವಿಕೃತಿ ಮೆರೆದಿದ್ದರು.