ಬೆಂಗಳೂರು: ದೀರ್ಘಕಾಲದಿಂದ ಚರ್ಚೆಯಾಗುತ್ತಿರುವ ಸಂಪುಟ ವಿಸ್ತರಣೆ ಶೀಘ್ರದಲ್ಲೆ ನಡೆಯುವ ಸಾಧ್ಯತೆಯಿದೆ. ಐವರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಕೇಂದ್ರ ನಾಯಕರು ಅನುಮೋದನೆ ನೀಡಲಿದ್ದಾರೆ.
ಸಂಪುಟ ವಿಸ್ತರಣೆ ಜವಾಬ್ದಾರಿಯನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದ್ದಾರೆ ಎಂದು ಹೇಳಲಾಗಿದೆ,
ಆರ್ .ಶಂಕರ್, ಎಂಟಿಬಿ ನಾಗರಾಜ್, ಮುನಿರತ್ನ , ಉಮೇಶ್ ಕತ್ತಿ ಮತ್ತು ಸಿಪಿ ಯೋಗೇಶ್ವರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂದು ಉನ್ನತ ಮೂಲಗಳ ಮಾಹಿತಿ ತಿಳಿಸಿವೆ.
ಬಿಜೆಪಿ ಸರ್ಕಾರ ರಚನೆಯಾದಾಗಿನಿಂದಲೂ 8 ಬಾರಿ ಶಾಸಕರಾಗಿರುವ ಹುಕ್ಕೇರಿಯ ಉಮೇಶ್ ಕತ್ತಿ ನಿರಂತರವಾಗಿ ಲಾಬಿ ನಡೆಸುತ್ತಲೇ ಬಂದಿದ್ದಾರೆ, ಹೀಗಾಗಿ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ಖಚಿತ ಎಂದು ಹೇಳಲಾಗುತ್ತಿದೆ. ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಿದರೇ ಬೆಳಗಾವಿ ಐವರು ಶಾಸಕರಿಗೆ ಸಚಿವ ಸ್ಥಾನ ದೊರಕಿದಂತಾಗುತ್ತದೆ.
ಶುಕ್ರವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೇರಿದಂಕೆ 10 ಸದಸ್ಯರಸು ಭಾಗವಹಿಸಿದ್ದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಳಿನ್ ಕುಮಾರ್ ಕಟೀಲ್, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, ಆರ್. ಅಶೋಕ, ಈಶ್ವರಪ್ಪ, ಸಿಟಿ ರವಿ ಹಾಗೂ ಅರವಿಂದ ಲಿಂಬಾವಳಿ ಪಾಲ್ಗೊಂಡಿದ್ದರು. ಕೇಂದ್ರ ಸಚಿವ ಸದಾನಂದಗೌಡ ಮತ್ತು ಸಿಎಂ ಉದಾಸಿ ಸಭೆಗೆ ಗೈರಾಗಿದ್ದರು.
Advertisement