ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪಕ್ಷ ಹಾಗೂ ಸರ್ಕಾರ ನೀಡುವಂತಹ ನಿರ್ದೇಶನಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಸಚಿವರಲ್ಲಿ ಮೊದಲಿಗರು ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಕಟೀಲ್ ಹೇಳಿದರು.
ಮೈಸೂರು ಗ್ರಾಮಾಂತರ ವಿಭಾಗದ 8 ವಿಧಾನಸಭಾ ಕ್ಷೇತ್ರದಲ್ಲಿ ಬರುವ ಶಕ್ತಿ ಕೇಂದ್ರ ಮತ್ತು ಮಹಾಶಕ್ತಿ ಕೇಂದ್ರದ ಪ್ರಮುಖರು, ವಿಭಾಗೀಯ ಪ್ರಭಾರಿಗಳ ಸಭೆಯಲ್ಲಿ ಮಾತನಾಡಿದ ಅವರು,ಸ ಚಿವರಾದ ಸೋಮಶೇಖರ್ ಅವರು ಮೈಸೂರು ಜಿಲ್ಲೆಯ ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರಗಳಿಗೆ ಹಾಗೂ ವಿವಿಧ ಜಿಲ್ಲೆಗಳಿಗೆ ಭೇಟಿ ಕೊಟ್ಟಂತಹ ಸಂದರ್ಭದಲ್ಲಿ ಪಕ್ಷದ ಕಚೇರಿಗಳಿಗೆ ನಿಯಮಿತವಾಗಿ ಭೇಟಿ ಕೊಟ್ಟು, ಕಾರ್ಯಕರ್ತರ ಮತ್ತು ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸುವ ಕೆಲಸವನ್ನು ಅತ್ಯಂತ ಶಿಸ್ತುಬದ್ಧವಾಗಿ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಈ ಭಾಗದಲ್ಲಿ ಬಿಜೆಪಿಗೆ ಒಳ್ಳೆಯ ತಂಡವಿದೆ. ಹಗಲು-ರಾತ್ರಿ ಕೆಲಸ ಮಾಡುವ ಉಸ್ತುವಾರಿ ಸಚಿವರಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಹಾಗೂ ಮುಂದಿನ ವಿಧಾನಸಭಾ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಿ ಎಂದು ಕಟೀಲ್ ಅವರು ಕರೆ ನೀಡಿದರು. ಶೇ.80ರಷ್ಟು ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಸಾಧಿಸಬೇಕು ಎಂದು ಕರೆ ನೀಡಿದರು. ಪಕ್ಷವು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ಮಾಜಿ ಸಚಿವರು ಹಾಗೂ ವಿಧಾನಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್ ಮಾತನಾಡಿ, ನಾನೂ ಕೂಡ 2 ಬಾರಿ ಮೈಸೂರಿಗೆ ಉಸ್ತುವಾರಿ ಸಚಿವನಾಗಿದ್ದೆ. ಜೊತೆಗೆ ಹಲವಾರು ಉಸ್ತುವಾರಿ ಸಚಿವರನ್ನು ನೋಡಿದ್ದೇನೆ. ಸೋಮಶೇಖರ್ ನಾನೂ ಸೇರಿದಂತೆ ಹಿಂದಿನ ಎಲ್ಲ ಉಸ್ತುವಾರಿ ಸಚಿವರಿಗಿಂತ ಅತ್ಯುತ್ತಮವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಜಿಲ್ಲೆಯ ಕಟ್ಟ ಕಡೆಯ ಭಾಗಗಳಿಗೆ ಪ್ರವಾಸ ಕೈಗೊಂಡು, ಕಾರ್ಯಕರ್ತರಿಗೆ ಸುಲಭವಾಗಿ ಲಭಿಸುವ ಸಚಿವರಾಗಿದ್ದಾರೆ. ಇವರಿಗೆ ಅಭಿನಂದಿಸುತ್ತೇನೆ. ನಾವೆಲ್ಲರೂ ಸೇರಿ ಬಿಜೆಪಿಯನ್ನು ಈ ಭಾಗದಲ್ಲಿ ಬಲಿಷ್ಠಗೊಳಿಸುತ್ತೇವೆ ಎಂದು ತಿಳಿಸಿದರು.
Advertisement