'ಕಟ್ ಎಂಡ್ ಪೇಸ್ಟ್ ವಿಡಿಯೋ 'ಎಂದು ರುಜುವಾತುಪಡಿಸಿ: ಮುಖ್ಯಮಂತ್ರಿಗೆ ಎಚ್.ಡಿ.ಕುಮಾರಸ್ವಾಮಿ ಸವಾಲು

ಮಂಗಳೂರು ಗಲಭೆಯಲ್ಲಿ ಪೊಲೀಸರ ದೌರ್ಜನ್ಯ ಕುರಿತು ಜೆಡಿಎಸ್   ಬಿಡುಗಡೆಗೊಳಿಸಿರುವ ಸಿಡಿಯನ್ನು "ಅರ್ಥವಿಲ್ಲದ ಕಟ್ ಎಂಡ್ ಪೇಸ್ಟ್ ವಿಡೀಯೋ" ಎಂದು  ಟೀಕಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದು, ಮುಖ್ಯಮಂತ್ರಿ ಬಾಲಿಶ ಹೇಳಿಕೆ  ನೀಡಿದ್ದಾರೆ. ತಮ್ಮ ವಿಡಿಯೋ ಕಟ್ ಎಂಡ್ ಪೇಸ್ಟ್ ಎನ್ನುವುದನ್ನು ರುಜು
ಎಚ್‌ಡಿ ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಮಂಗಳೂರು ಗಲಭೆಯಲ್ಲಿ ಪೊಲೀಸರ ದೌರ್ಜನ್ಯ ಕುರಿತು ಜೆಡಿಎಸ್   ಬಿಡುಗಡೆಗೊಳಿಸಿರುವ ಸಿಡಿಯನ್ನು "ಅರ್ಥವಿಲ್ಲದ ಕಟ್ ಎಂಡ್ ಪೇಸ್ಟ್ ವಿಡೀಯೋ" ಎಂದು  ಟೀಕಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದು, ಮುಖ್ಯಮಂತ್ರಿ ಬಾಲಿಶ ಹೇಳಿಕೆ  ನೀಡಿದ್ದಾರೆ. ತಮ್ಮ ವಿಡಿಯೋ ಕಟ್ ಎಂಡ್ ಪೇಸ್ಟ್ ಎನ್ನುವುದನ್ನು ರುಜುವಾತು ಪಡಿಸಿ ಎಂದು  ಸವಾಲು ಹಾಕಿದ್ದಾರೆ.

ಮಂಗಳೂರು ಶಾಂತವಾದರೆ ಅದು ವಾಣಿಜ್ಯಿಕವಾಗಿ  ಬೆಳವಣಿಗೆಯಾಗುತ್ತದೆ. ದೇಶಕ್ಕೆ ಮಾದರಿಯಾಗುವ ತನ್ನ ಐತಿಹಾಸಿಕ ಗುಣವನ್ನು  ಮುಂದುವರಿಸಿಕೊಂಡು ಹೋಗುತ್ತದೆ. ಶಾಂತಿ ಸ್ಥಾಪನೆಯಾಗಬೇಕಿದ್ದರೆ ಬಿಜೆಪಿ  ತೆಪ್ಪಗಿರಬೇಕಷ್ಟೇ ಎಂದು ಟ್ವೀಟ್ ಮೂಲಕ ಕುಟುಕಿದ್ದಾರೆ.

ಸಮುದ್ರ ತೀರದ  ಜಗತ್ತಿನ ಹಲವು ಪ್ರದೇಶಗಳು ವಾಣಿಜ್ಯ ನಗರಿಗಳಾಗಿವೆ.  ಮುಂಬೈ, ಚೆನ್ನೈ, ಕೊಚ್ಚಿ ನಮ್ಮ  ದೇಶದ ಉದಾಹರಣೆಗಳು. ಮಂಗಳೂರಿಗೂ ಅಂಥದ್ದೇ ಅವಕಾಶಗಳಿದ್ದವು, ಈಗಲೂ ಇದೆ. ದೇಶಕ್ಕೆ  ದೊಡ್ಡ ಬ್ಯಾಂಕ್‌ಗಳನ್ನು ಕೊಟ್ಟಿದ್ದು ಇದೇ ಕರಾವಳಿ. ಆದರೆ ಬಿಜೆಪಿಯ ಚಿಲ್ಲರೆ  ರಾಜಕಾರಣ ಮಂಗಳೂರಿನ ವಾಣಿಜ್ಯಿಕ ಬೆಳವಣಿಗೆಗೆ ಅಡ್ಡಗಾಲಾಗಿದೆ. ಮಂಗಳೂರಿನಲ್ಲಿ ನಾನು  ರಾಜಕಾರಣ ಮಾಡಬೇಕಿಲ್ಲ. ಅಲ್ಲಿ ರಾಜಕಾರಣ ಮಾಡುತ್ತಿರುವುದು ನೀವು. ಅಲ್ಲಿ ಕೋಮು ಗಲಭೆ  ಉಂಟು ಮಾಡುತ್ತಿರುವುದು ನೀವು. ವಾಣಿಜ್ಯ ನಗರಿಯಾಗಬೇಕಿದ್ದ ಮಂಗಳೂರನ್ನು ಬಿಜೆಪಿ ಕೋಮು  ರಾಜಕಾರಣದ ಕಣವಾಗಿ ಮಾಡಿದೆ ಎಂದು ಆರೋಪಿಸಿದರು.

ಮೆಕ್ಕಾಕ್ಕೆ ಹೋದಾಗ  ಮುಸಲ್ಮಾನರು ಸೈತಾನನಿಗೆ ಕಲ್ಲು ಹೊಡೆಯುತ್ತಾರೆ. ಪೊಲೀಸರ ಮೇಲೆ ಕಲ್ಲು ತೂರಲು ಅವರೇನು  ಸೈತಾನರೇ ಎಂದು ಸೋದರಿ ಶೋಭಾ ಪ್ರಶ್ನೆ ಮಾಡಿದ್ದಾರೆ. ಹೋರಾಟಗಾರರೇನು ಸೈತಾನರೇ?  ಇದಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಉತ್ತರಿಸಬೇಕು ಎಂದು ತಿರುಗೇಟು ನೀಡಿದ್ದಾರೆ.

ಮಂಗಳೂರು  ಶಾಂತಿಯಿಂದಿದೆ, ಮರಳಿ ಗಲಭೆ ಎಬ್ಬಿಸಿ ಅಲ್ಲಿ ಅಸ್ತಿತ್ವವೇ ಇಲ್ಲದ ತಮ್ಮ ಪಕ್ಷಕ್ಕೆ  ನೆಲೆ ಕಲ್ಪಿಸಲು ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ ಎಂದು ಸೋದರಿ ಶೋಭಾ ಕರಂದ್ಲಾಜೆ  ಹೇಳಿದ್ದಾರೆ. ಮಂಗಳೂರಿನ ಭಿನ್ನ ಧ್ವನಿಗಳ ಕೊರಳು ಬಿಗಿ ಹಿಡಿದು, ಉಸಿರುಗಟ್ಟಿಸಿ,  ಸದ್ದು ಬಾರದಂತೆ ಮಾಡಿರುವುದು ನಿಮ್ಮ ಪ್ರಕಾರ 'ಶಾಂತಿ'ಯೇ? ಗಲಭೆಯ ಸಿಡಿ ಬಿಡುಗಡೆ  ಮಾಡಿದ್ದಕ್ಕೆ ಸದಾನಂದಗೌಡ ವ್ಯಂಗ್ಯವಾಡಿದ್ದಾರೆ. ಸಿಡಿ ಹಲವರಿಗೆ ರಾಜಕೀಯ ಅಸ್ತಿತ್ವದ  ಸ್ವತ್ತು ಎಂದಿದ್ದಾರೆ. ಬಿಜೆಪಿಯಲ್ಲಿ ಸದ್ದು ಮಾಡಿದ ಸಿಡಿಗಳ ಸಂಖ್ಯೆ ಒಂದೆರಡೇ? ಎಲ್ಲ  ಸಿಡಿಗಳು ಬಯಲಾದರೆ ಬಿಜೆಪಿಗರು ಬೆತ್ತಲಾಗುತ್ತಾರಷ್ಟೇ. ಸಿಡಿಗಳು ಬಿಜೆಪಿಯ ಸ್ವತ್ತು.  ಸಿಡಿ ಬಗ್ಗೆ ಮಾತಾಡುವಾಗ ಸದಾನಂದಗೌಡ ಎಚ್ಚರವಾಗಿರಲಿ.  ನನ್ನ ಕಾಲದಲ್ಲೂ ಇದೇ  ಪೊಲೀಸರಿದ್ದರು. ಹೌದು. ಆದರೆ ನನ್ನ ಕಾಲದಲ್ಲಿ ಗಲಭೆಗಳು ಯಾಕೆ ಆಗಲಿಲ್ಲ?  ಗೋಲಿಬಾರ್‌ಗಳು ಯಾಕೆ ಆಗಲಿಲ್ಲ? ಇದಕ್ಕೆ ನೀವು ಉತ್ತರಿಸುವಿರೇ ಎಂದು ಸವಾಲು ಹಾಕಿದ್ದಾರೆ. 

ಪೊಲೀಸರು  ಗಲಭೆ ಮಾಡುವುದಿಲ್ಲ, ನಿಯಂತ್ರಿಸುತ್ತಾರೆ. ಕುಮಾರಸ್ವಾಮಿ ಕಾಲದಲ್ಲೂ ಅದೇ ಪೋಲೀಸರೇ  ಇದ್ದರು ಎಂದಿದ್ದಾರೆ ಗೃಹ ಸಚಿವ. ಬೊಮ್ಮಾಯಿ ಅವರೇ ಅದು ನನ್ನ ಕಾಲ.  ಶಾಂತಿ-ಸುವ್ಯವಸ್ಥೆಗಷ್ಟೇ ಪೊಲೀಸರ ಸೇವೆ ಪಡೆಯುತ್ತಿದ್ದೆವು. ಇದು ನಿಮ್ಮ ಕಾಲ. ಗಲಭೆ,  ಗುಂಡೇಟಿಗೆ ನೀವು ಪೊಲೀಸರನ್ನು ಬಳಸಿಕೊಳ್ಳುತ್ತಿದ್ದೀರಿ ಎಂದು ಖಾರವಾಗಿ ತಿರುಗೇಟು ನೀಡಿದ್ದಾರೆ.

ಉಪ  ಚುನಾವಣೆಯಲ್ಲಿ ಸೋತ ಹತಾಶೆಯಿಂದ ಸ್ಥಿಮಿತ ಕಳೆದುಕೊಂಡ ಕುಮಾರಸ್ವಾಮಿ ಮಂಗಳೂರು ಗಲಭೆ  ವಿಡಿಯೊ ಬಿಡುಗಡೆ ಮಾಡಿದ್ದಾರೆ ಎಂದು ಡಿಸಿಎಂ ಲಕ್ಮಣ ಸವದಿ  ಆರೋಪಿಸಿದ್ದಾರೆ. ಹೀಗಿದ್ದ‌ ಮೇಲೆ ಸವದಿ ಅದ್ಯಾವ ಸ್ಥಿಮಿತ ಕಳೆದುಕೊಂಡು ಸದನದಲ್ಲಿ ನೀಲಿ  ಚಿತ್ರ ನೋಡಿದರೇ? ಈ ಬಾರಿ ಅವರು ಯಾವ ಚುನಾವಣೆ ಗೆದ್ದಿದ್ದಾರೆ? ಅವರ ಬುದ್ಧಿ ಸ್ಥಿಮಿತ  ಉಳಿದಿದೆಯೇ? ಎಂದು ತಿರುಗೇಟು ನೀಡಿದ್ದಾರೆ.

ಸಿ.ಡಿ.ಯ ಸತ್ಯಾಸತ್ಯತೆ ಬಗ್ಗೆ  ತಜ್ಞರಿಂದ ವರದಿ ತರಿಸಿ ಕೊಳ್ಳುವ ಧೈರ್ಯ ನಿಮಗಿದೆಯೇ? ಅದಕ್ಕೂ ಮಿಗಿಲಾಗಿ ನಿಮ್ಮ  ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ. ನಾನು ಬಿಡುಗಡೆ ಮಾಡಿರುವ 'ಸಿಡಿ'ಯನ್ನು ನೀವು  ಸೃಷ್ಟಿಸಿಕೊಂಡಂತೆ 'ಕಟ್ ಅಂಡ್ ಪೇಸ್ಟ್' ಬಿಜೆಪಿ ಸರ್ಕಾರ ಎಂದುಕೊಂಡಿದ್ದೀರಾ ಎಂದು  ಯಡಿಯೂರಪ್ಪಗೆ ಟಾಂಗ್ ನೀಡಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com