ಮೈಸೂರು/ ಬೆಂಗಳೂರು: ಹಲವು ದಿನಗಳಿಂದ ಕಗ್ಗಾಂಟಾಗಿರುವ ಕೆಪಿಸಿಸಿ ಅಧ್ಯಕ್ಷರ ನೇಮಕ ಇನ್ನೊಂದು ವಾರದಲ್ಲಿ ಬಗೆಹರಿಯಲಿದೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ತಡವಾಗುತ್ತಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ ಖಂಡಿತವಾಗಿಯೂ ಆದಷ್ಟು ಬೇಗ ಇತ್ಯರ್ಥವಾಗುವ ಅವಶ್ಯಕತೆಯಿದೆ. ನಾನೂ ಕೂಡ ವರಿಷ್ಠರ ಜೊತೆ ಮಾತನಾಡಿದ್ದೇನೆ.ಬಹುಶಃ ಮುಂದಿನ ವಾರದಲ್ಲಿ ಎಲ್ಲ ತೀರ್ಮಾನವಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಕಾಂಗ್ರೆಸ್ ನಲ್ಲಿ ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗುತ್ತಾರಾ ಎಂಬ ಪ್ರಶ್ನೆಗೆ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿ, ಯಾರನ್ನು ಅಧ್ಯಕ್ಷರನ್ನಾಗಿಸಬೇಕು ಎಂಬುದು ಹೈಕಮಾಂಡ್ ತೀರ್ಮಾನಿಸುತ್ತದೆ.
ಯಾವುದೇ ಅಭಿಪ್ರಾಯ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆ ಆಗಬೇಕು. ಆಗುತ್ತಿದೆ. ಎಲ್ಲರ ಬಗ್ಗೆಯೂ ಪರ-ವಿರೋಧ ಅಭಿಪ್ರಾಯವಿರತ್ತದೆ. ಮುಂದಿನವಾರ ಎಲ್ಲವೂ ತೀರ್ಮಾನವಾಗಲಿದೆ ಎಂದರು.
ನಾಲ್ಕು ಮಂದಿ ಕಾರ್ಯಾಧ್ಯಕ್ಷರಾಗುತ್ತಿರುವ ವಿಚಾರ ಸುಳ್ಳು. ಈ ಕುರಿತು ಯಾರು ಅಧಿಕೃತವಾಗಿ ಹೇಳಿಲ್ಲ. ಕಾರ್ಯಾಧ್ಯಕ್ಷರು ಹಿಂದೆ ಎಲ್ಲರೂ ಆಗಿದ್ದಾರೆ. ಈ ವಿಚಾರ ಬಹಿರಂಗವಾಗಿ ಚರ್ಚೆಯಾಗುವ ಅವಶ್ಯಕತೆಯಿಲ್ಲ ಎಂದರು.
ಇನ್ನು ಬಿಜೆಪಿ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿ, ರಾಜ್ಯದ ಅಭಿವೃದ್ಧಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಒಳ್ಳೆಯ ಮಂತ್ರಿ ಮಂಡಲ ರಚನೆಯಾಗಬೇಕು. ಎಷ್ಟು ದಿನ ಅಂತ ಖಾಲಿ ಇಟ್ಟು ಒಬ್ಬಬ್ಬರಿಗೆ 3-4 ಖಾತೆ ಇಟ್ಟುಕೊಂಡು ಕೆಲಸ ಮಾಡಲು ಸಾಧ್ಯವಿಲ್ಲ
ಕರ್ನಾಟಕದಲ್ಲಿ ಏನೂ ಕೆಲಸ ಆಗುತ್ತಿಲ್ಲ. ಆಡಳಿತ ಇಲ್ಲ. ಮಂತ್ರಿಗಳಿಲ್ಲ. ಪಕ್ಷದಲ್ಲೇ ಭಿನ್ನಾಭಿಪ್ರಾಯವಿದೆ. ಹಾಗಾಗಿ ಕರ್ನಾಟಕಕ್ಕೇ ಹಿನ್ನಡೆಯಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
Advertisement