ವಿಜಯಪುರ: ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿಲ್ಲ, ಆದರೆ, ವಿಧಾನಸಭೆ ಪ್ರತಿಪಕ್ಷ ಸ್ಥಾನಕ್ಕೆ ದಕ್ಷಿಣದವರಿದ್ದು, ಉತ್ತರ ಕರ್ನಾಟಕ ಭಾಗದ ಮುಖಂಡರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುವ ವಿಶ್ವಾಸ ಹೊಂದಿರುವುದಾಗಿ ಮಾಜಿ ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿಗೆ ಸೋನಿಯಾ ಗಾಂಧಿ ಹಾಗೂ ಇನ್ನಿತರ ಮುಖಂಡರನ್ನು ಭೇಟಿಯಾದ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರನ್ನಾಗಿ ತಮ್ಮನ್ನು ನೇಮಿಸುವಂತೆ ಬೇಡಿಕೆ ಇಟ್ಟಿಲ್ಲ. ಅದು ಅವರ ತೀರ್ಮಾನಕ್ಕೆ ಬಿಟ್ಟದ್ದು, ಅವರ ನಿರ್ಧಾರವನ್ನು ಗೌರವಿಸುತ್ತೇನೆ. ಆದಾಗ್ಯೂ, ಆ ಸ್ಥಾನಕ್ಕೆ ತಮ್ಮನ್ನು ಸಿದ್ದರಾಮಯ್ಯ ಬೆಂಬಲಿಸಿದ್ದಾರೆ ಎಂದರು.
ಹೆಚ್ಚಿನ ಅನುಭವ ಹೊಂದಿರುವ ಹಾಗೂ 13 ಬಾರಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರನ್ನೇ ಪ್ರತಿಪಕ್ಷ ನಾಯಕ ಸ್ಥಾನದಲ್ಲಿ ಮುಂದುವರೆಸುವಂತೆ ಹೈಕಮಾಂಡ್ ಒತ್ತಾಯಿಸುವುದಾಗಿ ಅವರು ಹೇಳಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಎಂಬಿ ಪಾಟೀಲ್, ಬಾಂಬ್ ಇಟ್ಟವನ್ನು ಹಿಂದೂ ಎಂದು ಗೊತ್ತಾದ ಬಳಿಕ ಬಿಜೆಪಿಯವರು ನಡೆದುಕೊಳ್ಳುತ್ತಿರುವುದು ನಾಚಿಕೆಯಾಗುವಂತಹದ್ದು ಒಂದು ವೇಳೆ ಆತ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ್ದರೆ ಅವರ ವರ್ತನೆಯೇ ಬೇರೆಯಾಗಿರುತಿತ್ತು. ಆರೋಪಿ ಮಾನಸಿಕ ಅಸ್ವಸ್ಥ ಎಂದು ಗೃಹ ಸಚಿವರು ನೀಡಿರುವ ಹೇಳಿಕೆ ನಾಚಿಕೆಗೇಡಿತನದು ಎಂದು ಟೀಕಿಸಿದರು.
Advertisement