ಕೋವಿಡ್‌ ಹಗರಣ: ಕಾಂಗ್ರೆಸ್‌–ಬಿಜೆಪಿಗೆ ಮಾಜಿ ಸಿಎಂ ಕುಮಾರಸ್ವಾಮಿ ಪಂಚ ಪ್ರಶ್ನೆಗಳು

ಕೊರೋನಾ ವೈರಸ್‌ನಿಂದ ಜನ ಮತ್ತು ಅವರ ಜೀವನ ಸಂಕಷ್ಟದಲ್ಲಿದೆ. ಇಂಥ ಸಂದಿಗ್ಧ ಸನ್ನಿವೇಶದಲ್ಲೂ ಕೋವಿಡ್‌ ಭ್ರಷ್ಟಾಚಾರ ದಂಥ ಗಂಭೀರ ಆರೋಪ ಕೇಳಿ ಬಂದಿರುವುದು ರಾಜ್ಯದ ದುರ್ದೈವ.
ಎಚ್.ಡಿ  ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಕೊರೋನಾ ವೈರಸ್‌ನಿಂದ ಜನ ಮತ್ತು ಅವರ ಜೀವನ ಸಂಕಷ್ಟದಲ್ಲಿದೆ. ಇಂಥ ಸಂದಿಗ್ಧ ಸನ್ನಿವೇಶದಲ್ಲೂ ಕೋವಿಡ್‌ ಭ್ರಷ್ಟಾಚಾರ ದಂಥ ಗಂಭೀರ ಆರೋಪ ಕೇಳಿ ಬಂದಿರುವುದು ರಾಜ್ಯದ ದುರ್ದೈವ. ಆಡಳಿತ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿರುವ ಕಾಂಗ್ರೆಸ್‌, ಹಗರಣದ ಬಗ್ಗೆ ಈ ವರೆಗೆ ಯಾವುದೇ ತನಿಖಾ ಸಂಸ್ಥೆಗೆ ದೂರು ನೀಡದೇ ಪ್ರಚಾರಕ್ಕಷ್ಟೇ ಸೀಮಿತವಾಗಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ಮತ್ತು ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್ ಗೆ ಪ್ರಶ್ನೆಗಳನ್ನು ಕೇಳುವ ಮೂಲಕ ಇಬ್ಬರ ನಡುವಿನ ಜಗಳದಲ್ಲಿ ಮೂರನೆಯವರು ಲಾಭ ನಷ್ಟದ ಲೆಕ್ಕಾಚಾರದಲ್ಲಿ ಪ್ರಶ್ನೆಗಳನ್ನು ಕೇಳಿದಂತಿದೆ.

ದೊಡ್ಡ ಮಟ್ಟದ ಆರೋಪ ಹೊತ್ತಿರುವ ಆಡಳಿತ ಪಕ್ಷ ತನಿಖೆಯಿಂದ ಮುಕ್ತಿ ಪಡೆಯುವ ಯಾವ ಕ್ರಮಕ್ಕೂ ಮುಂದಾಗದೇ, ಹಗರಣ ನಡೆದಿರುವುದನ್ನು ಪರೋಕ್ಷವಾಗಿ ಒಪ್ಪಿಕೊಳ್ಳುತ್ತಿದೆ. ಜನರನ್ನು ರಕ್ಷಿಸಬೇಕಾದವರೇ ಕೆಸರೆರಚಾಟದ ಮೂಲಕ ಜನರ ಜೀವದ ಜೊತೆಗೆ ಚೆಲ್ಲಾಟ ಆಡುತ್ತಿರುವುದು ಎರಡೂ ಪಕ್ಷಗಳ ಅತ್ಯಂತ ಕ್ರೂರ ನಡವಳಿಕೆ ಎಂದು ಎಚ್​​ಡಿಕೆ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ ಕಾಂಗ್ರೆಸ್​ ಮತ್ತು ಬಿಜೆಪಿಗೆ ಪಂಚ ಪ್ರಶ್ನೆಗಳನ್ನು ಕೇಳಿದ್ದಾರೆ.

ಕಾಂಗ್ರೆಸ್ ಗೆ​​ ಎಚ್​ಡಿಕೆ ಕೇಳಿದ ಪ್ರಶ್ನೆಗಳು
1. ಕೋವಿಡ್‌ ಹಗರಣದ ಬಗ್ಗೆ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡುತ್ತಿರುವ ಕಾಂಗ್ರೆಸ್‌ ನಾಯಕರು ಎಲ್ಲಾ ದಾಖಲೆಪತ್ರಗಳಿದ್ದೂ ಈವರೆಗೆ ಯಾರ ವಿರುದ್ಧವೂ ಯಾಕೆ ಒಂದೇ ಒಂದು ದೂರು ದಾಖಲಿಸಿಲ್ಲ?

2. ದೂರು ದಾಖಲು ಮಾಡದೇ ನಿತ್ಯ ಪತ್ರಿಕಾಗೋಷ್ಠಿಯಲ್ಲಿ ಬಂದು ಏರು ಧ್ವನಿಯಲ್ಲಿ ಮಾತನಾಡುತ್ತಿರುವ ಕಾಂಗ್ರೆಸ್‌ ನಾಯಕರ ನಡೆಯ ಹಿಂದೆ ಪ್ರಚಾರಪ್ರಿಯತೆ ಅಡಗಿದೆಯೋ ಅಥವಾ ಸಾರ್ವಜನಿಕ ಹಣ ಅಪವ್ಯವಾಗುತ್ತಿದೆ ಎಂಬ ಪ್ರಮಾಣಿಕ ಕಾಳಜಿ ಇದೆಯೋ?

3. ‘ಲೆಕ್ಕ ಕೊಡಿ’ ಎಂದು ಕಾಂಗ್ರೆಸ್‌ನ ಸಿಎಲ್‌ಪಿ ನಾಯಕರು ಕೇಳುತ್ತಾರೆ. ‘ಉತ್ತರ ಕೊಡಿ ಬಿಜೆಪಿ’ ಎಂದು ಪಕ್ಷದ ಅಧ್ಯಕ್ಷರು ಕೇಳುತ್ತಾರೆ. ನಿಮಗೆ ಉತ್ತರ, ಲೆಕ್ಕ ಕೊಟ್ಟರೆ ಸಾಕೆ? ಹಗರಣವನ್ನು ಕಾನೂನಾತ್ಮಕ ಹೋರಾಟದ ದಿಕ್ಕಿಗೆ ಕೊಂಡೊಯ್ಯುವ ಯಾವುದಾದರೂ ನಿಶ್ಚಿತ, ನಿಖರ ಯೋಜನೆ ಇದೆಯೇ?

4. ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ಲೋಕಾಯುಕ್ತ ಸಂಸ್ಥೆಯ ರಕ್ತ, ಮಾಂಸವನ್ನು ಹೀರಿ, ತಿಂದು ಇದೇ ಕಾಂಗ್ರೆಸ್‌ ಸರ್ಕಾರ ಎಸಿಬಿ ರಚಿಸಿತ್ತು. ಹಗರಣದ ಸಂಬಂಧ ಇದೇ ಸಂಸ್ಥೆಗೆ ಕಾಂಗ್ರೆಸ್‌ ದೂರು ನೀಡಬಹುದಿತ್ತಲ್ಲ? ಯಾಕೆ ಎಸಿಬಿ ಮೇಲೆ ಕಾಂಗ್ರೆಸ್‌ಗೆ ನಂಬಿಕೆ ಇಲ್ಲವೇ?

5. ಕೋವಿಡ್‌ ಅಕ್ರಮದ ಆರೋಪ ಮಾಡಿದಾಗಿನಿಂದ ಕಾಂಗ್ರೆಸ್‌ ನಾಯಕರು ಪತ್ರಿಕಾಗೋಷ್ಠಿ, ಪತ್ರಿಕಾ ಹೇಳಿಕೆ, ಟ್ವೀಟ್‌, ಟ್ವಿಟರ್‌ ಟ್ರೆಂಡ್‌, ಪತ್ರ ಚಳವಳಿಗೆ ಮಾತ್ರ ಸೀಮಿವಾಗಿರುವುದನ್ನು ನೋಡುತ್ತಿದ್ದರೆ ಇದು ಕೇವಲ ಪ್ರಚಾರಕ್ಕಾಗಿ, ಸುದ್ದಿಯಲ್ಲಿರಲ್ಲಿಕ್ಕಾಗಿ ಮಾಡುತ್ತಿರುವ ಪ್ರಹಸನ ಎನಿಸುತ್ತಿದೆ. ಇದಕ್ಕೆ ನಿಮ್ಮ ಉತ್ತರವೇನು?

ಜವಾಬ್ದಾರಿಯುತ ಪ್ರತಿಪಕ್ಷವಾಗಿರುವ ಕಾಂಗ್ರೆಸ್‌ಗೆ ಸಾರ್ವಜನಿಕರ ಹಣದ ಮೇಲೆ ಅಷ್ಟು ಕಾಳಜಿ ಇದ್ದರೆ ಮೊದಲು ಯಾವುದಾದರೂ ತನಿಖಾ ಸಂಸ್ಥೆಗೆ ಅಧಿಕೃತವಾಗಿ ದೂರು ದಾಖಲಿಸಲಿ. ಇದು ನನ್ನ ಸವಾಲು ಎಂದು ಎಚ್​​ಡಿಕೆ ಕಾಂಗ್ರೆಸ್​​ಗೆ ಸವಾಲ್​ ಎಸೆದಿದ್ಧಾರೆ.

ಬಿಜೆಪಿಗೂ ಹಲವು ಪ್ರಶ್ನೆಗಳು
1. ಸುಮಾರು ಎರಡು ಸಾವಿರ ಕೋಟಿ ರೂಪಾಯಿ ಮೊತ್ತದ ಆರೋಪವನ್ನು ಕಾಂಗ್ರೆಸ್ ನಾಯಕರು ಮಾಡಿದರೂ ಬಿಜೆಪಿ ಯಾಕೆ ತನಿಖೆಯ ಆಗ್ರಹಗಳಿಗೆ ಕಿವಿಗೊಡುತ್ತಿಲ್ಲ. ತನಿಖೆಯ ಕಡೆಗೆ ಗಮನವನ್ನೇ ನೀಡಿದೇ ನಿಂಧನೆಯನ್ನು ಯಾಕೆ ಹೊತ್ತು ತಿರುಗುತ್ತಿದೆ?

2. ನಿರ್ದಿಷ್ಟ ಸಚಿವರ ಮೇಲೆ ಗಂಭೀರ ಆರೋಪಗಳು ಬಂದರೂ ಅವರಿಂದ ರಾಜೀನಾಮೆ ಪಡೆದಿಲ್ಲ ಏಕೆ? ಇದೇನಾ ಜನರಿಗೆ ಯಡಿಯೂರಪ್ಪನವರ ಉತ್ತರದಾಯಿತ್ವ?

3. ಸಚಿವರ ರಾಜೀನಾಮೆ ಪಡೆಯಲು ಮುಖ್ಯಮಂತ್ರಿಗಳಿಗೆ ರಾಜಕೀಯದ ಒತ್ತಡ ಇರಬಹುದು. ಆದರೆ, ಅಧಿಕಾರಿಗಳ ವಿರುದ್ಧವಾದರೂ ಕ್ರಮ ಕೈಗೊಳ್ಳಬಹುದಿತ್ತು. ಈವರೆಗೆ ಒಬ್ಬೇ ಒಬ್ಬ ಅಧಿಕಾರಿ ವಿರುದ್ಧ ಕ್ರಮ ಕೈಗೊಂಡ ವರದಿ ಇಲ್ಲ. ಅಧಿಕಾರಿಗಳನ್ನು ಅಲ್ಲಲ್ಲಿಯೇ ಬಿಟ್ಟು ಸಾಕ್ಷ್ಯ ನಾಶಕ್ಕೇನಾದರೂ ಪ್ರಯತ್ನಿಸುತ್ತಿದ್ದೀರಾ?

4. ಕಾಂಗ್ರೆಸ್‌ ಮಾಡುತ್ತಿರುವ ಪತ್ರಿಕಾಗೋಷ್ಠಿಗಳಿಗೆ ಪ್ರತಿಯಾಗಿ ಸಚಿವರಿಂದ ಪತ್ರಿಕಾಗೋಷ್ಠಿಗಳನ್ನು ಮಾಡಿಸುತ್ತಿರುವ ಸರ್ಕಾರ ಇಲ್ಲಿ ಪ್ರಚಾರ ಪಡೆಯಲೇನಾದರೂ ಪ್ರಯತ್ನಿಸುತ್ತಿದೆಯೇ? ಅದೂ ಐವರು ಸಚಿವರು ಒಟ್ಟೊಟ್ಟಿಗೆ ಬಂದು ಮಾಧ್ಯಮಗಳ ಮುಂದೆ ನಿಲ್ಲುವುದನ್ನು ನೋಡಿದರೆ ಮಂತ್ರಿಮಂಡಲದ ಸಹೋದ್ಯೋಗಿಗಳಲ್ಲಿ ಪ್ರಚಾರದ ದಾಹ ತೀವ್ರವಾಗಿರುವಂತೆ ಕಾಣದೇ?

5. ಹಗರಣದ ಬಗ್ಗೆ ಈ ವರೆಗೆ ಪ್ರತಿ ಹೇಳಿಕೆಗಳನ್ನೇ ನೀಡುತ್ತಿರುವ ಸರ್ಕಾರ ತನಿಖೆಗೆ ಹಿಂದೇಟು ಹಾಕುತ್ತಿರುವುದು ನೋಡಿದರೆ, ಹಣ ಕದಿಯಲಾಗಿದೆ ಎಂದು ಅನಿಸದೇ? ಆಪರೇಷನ್‌ ಕಮಲಕ್ಕೆ ಮಾಡಿದ್ದ ಸಾಲ ತೀರಿಸಲು ಈ ಹಗರಣ ಮಾಡಿದ್ದೀರಾ?

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com