ಚಿತ್ರದುರ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತಾಕತ್ತು ಏನು ಎಂಬುದನ್ನು ಮೂರು ನಾಲ್ಕು ಬಾರಿ ಸಾಬೀತುಪಡಿಸಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.
ಸಿಎಂಗೆ ತಾಕತ್ ಇಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು ಕೇಂದ್ರದಿಂದ ಬರಬೇಕಿದ್ದ ಜಿಎಸ್ ಟಿ ಹಣವನ್ನು ತಂದಿದ್ದಾರೆ.
ಯಡಿಯೂರಪ್ಪ ನಾಲ್ಕನೇ ಬಾರಿ ಮುಖ್ಯಮಂತ್ರಿ ಆಗಿ ಸಮರ್ಥವಾಗಿ ಆಡಳಿತ ನಡೆಸುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಒಂದು ಬಾರಿ ಐದು ವರ್ಷ ಆಡಳಿತ ಪೂರೈಸಿ ಈಗ ವಿರೊಧ ಪಕ್ಷದಲ್ಲಿ ಕುಳಿತಿದ್ದಾರೆ ಎಂದು ಕುಟುಕಿದರು.
ವಿಧಾನ ಪರಿಷತ್ ಟಿಕೆಟ್ ಸಿಗದ ವಿಚಾರದಲ್ಲಿ ಹೆಚ್. ವಿಶ್ವನಾಥ್ ಅವರೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಹೀಗಾಗಿ ತಾವೆಲ್ಲ ಆ ಬಗ್ಗೆ ಮಾತನಾಡುವ ಅಗತ್ಯವಿಲ್ಲ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಎಲ್ಲರಿಗೂ ಚಿಕಿತ್ಸೆ ನೀಡುವ ಸಲುವಾಗಿ ಖಾಸಗಿ ಆಸ್ಪತ್ರೆಗಳಿಗೆ ಮನವಿ ಮಾಡಲಾಗಿದೆ. ಎಲ್ಲಾ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿ ದರಪಟ್ಟಿ ನೀಡಿದ್ದಾರೆ.ಈ ಸಂಬಂಧ ಗುರುವಾರ ನಡೆಯುವ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಬಸವರಾಜ ಬೊಮ್ಮಾಯಿ ಹೇಳಿದರು.
ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣ ಸಂಬಂಧ ಪ್ರತಿಕ್ರಯಿಸಲು ಬೊಮ್ಮಾಯಿ ಹಿಂದೇಟು ಹಾಕಿದರು.
Advertisement